ಚಿಕ್ಕಮಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸ್ವಯಂ ಚಾಲಿತ ದಂಡ ನಿರ್ವಹಣಾ ವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ಜಿಲ್ಲಾ ಪೊಲೀಸ್ ವತಿಯಿಂದ ಆರಂಭಿಸಲಾಗಿರುವ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ರಸ್ತೆ ಸಂಚಾರ ನಿರ್ವಹಣಾ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಚಾಲನೆ ನೀಡಿದರು.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ಪ್ರಕರಣಗಳ ನಿಯಂತ್ರಣ ತಡೆಗಟ್ಟುವಿಕೆ ಹಾಗೂ ಹೆಚ್ಚುತ್ತಿರುವ ವಾಹನ ದಟ್ಟಣೆ ಸಂಬಂಧ ರಸ್ತೆ ಸಂಚಾರ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸುಮಾರು 41 ಸೌರ ವಿದ್ಯುತ್ ಆಧಾರಿತ ಕೃತಕ ಬುದ್ಧಿಮತ್ತೆ (ಎಐ) ಕ್ಯಾಮರಾ ಕಣ್ಗಾವಲು ಸಂಪರ್ಕ ಜಾಲವನ್ನು ಚಿಕ್ಕಮಗಳೂರು ನಗರದೆಲ್ಲೆಡೆ ಅಳವಡಿಸಲಾಗಿದ್ದು, ಇಂಟಿಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ (ಐಸಿಸಿಸಿ) ಮೂಲಕ ಇದನ್ನು ನಿರ್ವಹಿಸಲಾಗುತ್ತಿದೆ.
ಕೃತಕ ಬುದ್ಧಿಮತ್ತೆ ಆಧಾರಿತ ರಸ್ತೆ ಸಂಚಾರ ನಿರ್ವಹಣಾ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್ ಅವರು, “ಮೆಸ್ಕಾಂ ಸಹಯೋಗದಲ್ಲಿ ಕಾರ್ಪೋರೇಟ್ ಹೊಣೆಗಾರಿಕೆ (CSR) ನಿಧಿಯಡಿ ಅಂದಾಜು 1.75 ಕೋಟಿ ರೂ. ವೆಚ್ಚದಲ್ಲಿ ಎರಡು ಹಂತಗಳಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದೆ,” ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ, ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ಜಿಲ್ಲಾ ರಕ್ಷಣಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತಿತರರು ಇದ್ದರು.
Launch of AI-based traffic management system
Leave a comment