ಚಿಕ್ಕಮಗಳೂರು : ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದ ಬಿಜೆಪಿ ಎಂ.ಕೆ. ಪ್ರಾಣೇಶ್ ಅವರು ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ, ವಿಧಾನ ಪರಿಷತ್ ಉಪಸಭಾಪತಿ ಹಾಗೂ ಸದಸ್ಯತ್ವ ಸ್ಥಾನಕ್ಕೆ ತಮ್ಮ ರಾಜೀನಾಮೆ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಸಂದೇಶ ಹಂಚಿಕೊಂಡಿರುವ ಅವರು, ತಮ್ಮ ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮ ಎಸಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. 1997ರಿಂದಲೂ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುವ ಹಕ್ಕು ಹೊಂದಿದ್ದರು ಮತ್ತು ಅದೇ ನಿಯಮದಂತೆ ಈ ಬಾರಿಯೂ ಮತದಾನ ನಡೆದಿತ್ತು.
ಆದರೆ ನಾಮನಿರ್ದೇಶಿತ ಸದಸ್ಯರ ಮತದಾನವೇ ಈ ವಿವಾದದ ಕೇಂದ್ರಬಿಂದುವಾಯಿತು. ಈ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿ ಫಲಿತಾಂಶ ವ್ಯತಿರಿಕ್ತವಾಗಿ ಬಂದಿರುವುದು ವಿಷಾದನೀಯ ಎಂದಿದ್ದಾರೆ.
ಕಳೆದ ನಾಲ್ಕೂವರೆ ವರ್ಷಗಳ ಕಾಲ ಯಾವುದೇ ಭ್ರಷ್ಟಾಚಾರಕ್ಕೆ ಆಸ್ಪದ ನೀಡದೆ, ಪಕ್ಷಾತೀತವಾಗಿ ಹಾಗೂ ಅತ್ಯಂತ ಪ್ರಾಮಾಣಿಕವಾಗಿ ಕ್ಷೇತ್ರದ ಸೇವೆ ಸಲ್ಲಿಸಿದ್ದೇನೆ. ಈ ಹಂತದಲ್ಲಿ ತಮಗೆ ಸಂಪೂರ್ಣ ಬೆಂಬಲವಾಗಿ ನಿಂತ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಜನತೆಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಈ ತೀರ್ಪಿನಿಂದ ಯಾವುದೇ ಕಾರ್ಯಕರ್ತರು ಅಥವಾ ಬೆಂಬಲಿತರು ಎದೆಗುಂದಬಾರದು. ಅಧಿಕಾರ ಕಳೆದುಕೊಂಡರೂ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿದ್ದು ಕೆಲಸ ಮಾಡುತ್ತೇನೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಶಕ್ತಿಯುತವಾಗಿ ಎಲ್ಲರೂ ಒಟ್ಟಾಗಿ ಮುನ್ನಡೆಯೋಣ ಎಂದು ಕರೆ ನೀಡಿದ್ದಾರೆ.
ಇದೇ ವೇಳೆ ನೂತನ ಸದಸ್ಯೆಯಾಗಿ ಆಯ್ಕೆಯಾಗಿರುವ ಗಾಯತ್ರಿ ಶಾಂತೇಗೌಡ ಅವರಿಗೆ ಶುಭಾಶಯ ಕೋರಿರುವ ಪ್ರಾಣೇಶ್, ಅವರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಉತ್ತಮವಾಗಿ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸಿದ್ದಾರೆ.
M.K. Pranesh resigns from the post of Legislative Council and Deputy Speaker
Leave a comment