ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮಿತಿಮೀರಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಕಳಸ, ಶೃಂಗೇರಿ ಹಾಗೂ ಕುದುರೆಮುಖ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಪ್ರಮುಖ ನದಿಗಳಾದ ತುಂಗಾ ಮತ್ತು ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಶೃಂಗೇರಿ ತಾಲೂಕು ಹಾಗೂ ಕೆರೆಕಟ್ಟೆ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ತುಂಗಾ ನದಿಯ ಒಳಹರಿವು ಹೆಚ್ಚಾಗಿದೆ. ನದಿಯ ಅಬ್ಬರಕ್ಕೆ ಶೃಂಗೇರಿ ಶ್ರೀ ಶಾರದಾಂಬೆ ದೇಗುಲದ ಪಾರ್ಕಿಂಗ್ ಲಾಟ್ಗೆ ತೆರಳುವ ಪ್ಯಾರಲಲ್ ರಸ್ತೆಯಲ್ಲಿ ಸುಮಾರು 3 ರಿಂದ 4 ಅಡಿ ನೀರು ನಿಂತಿದ್ದು, ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಮಲೆನಾಡು ಭಾಗದಲ್ಲಿ ಇನ್ನು ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ನದಿ ತೀರದ ನಿವಾಸಿಗಳು, ತಗ್ಗು ಪ್ರದೇಶದಲ್ಲಿ ಇರುವವರು ಹಾಗೂ ವಾಹನ ಸವಾರರು ಸುರಕ್ಷಿತ ಸ್ಥಳಗಳಲ್ಲಿ ಇರಬೇಕು. ಅನಗತ್ಯವಾಗಿ ನೀರಿನ ಹರಿವಿನ ಬಳಿ ತೆರಳಬಾರದು ಎಂದು ಜಿಲ್ಲಾಡಳಿತ ಕಟ್ಟೆಚ್ಚರ ನೀಡಿದೆ.
Malnad reels under heavy rains in the district
Leave a comment