ಚಿಕ್ಕಮಗಳೂರು: ಕಾಫಿನಾಡಿನ ಸಂತೇ ಮೈದಾನದ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಜಿಲ್ಲಾ ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ಅಪ್ರಾಪ್ತ ಯುವಕ ಮತ್ತು ಯುವತಿಯನ್ನು ಅಡ್ಡಗಟ್ಟಿ, ದಲಿತ ಸಮುದಾಯಕ್ಕೆ ಸೇರಿದ ಯುವಕನಿಗೆ ಬೆದರಿಕೆ ಹಾಕಿ ಹಲ್ಲೆ ನಡೆಸಲಾಗಿದ್ದು. ಈ ಕೃತ್ಯದಲ್ಲಿ ಭಾಗಿಯಾದ ಎಂಟು ಜನರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಸೇರಿದಂತೆ ವಿವಿಧ ಗಂಭೀರ ಕಲಂ ಅಡಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಯಾಜ್, ತಬ್ರಿಜ್ ಮತ್ತು ಹನೀಫ್ ಎಂಬ ಮೂರು ಆರೋಪಿಗಳನ್ನು ಬಂಧಿಸಲಾಗಿದೆ.
ಉಳಿದ ನಾಲ್ವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ. ಘಟನೆ ನಡೆದ ನಂತರ ಅವರು ಖುದ್ದಾಗಿ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ತನಿಖೆಯನ್ನು ಚುರುಕುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಅನ್ನು ಕೈಗೊಳ್ಳಲಾಗಿದೆ ಎಂದು ಜಿತೇಂದ್ರ ಕುಮಾರ್ ದಯಾಮ ಮಾಹಿತಿ ನೀಡಿದ್ದಾರೆ.
Moral Police Giri Case – Serious Consideration
Leave a comment