ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬಾಕಿ ಇರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಹಾಗೂ ನೀರು ಮತ್ತು ನೈರ್ಮಲ್ಯ ಮಿಷನ್ (ಡಿಡಬ್ಲ್ಯುಎಸ್ಎಂ) ನೋಡಲ್ ಅಧಿಕಾರಿ ಅಭಿಷೇಕ್ ಆನಂದ್ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ ಚಿಕ್ಕಮಗಳೂರು ತಾಲ್ಲೂಕಿನ ೧೪೬, ಕಡೂರು ತಾಲ್ಲೂಕಿನ ೪೩೪ ಹಾಗೂ ತರೀಕೆರೆ ತಾಲ್ಲೂಕಿನ ೧೫೬ ಗ್ರಾಮೀಣ ಜನವಸತಿಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.
ಕೆಲವು ಕಡೆ ಜಾಕ್ವೆಲ್ ಕಾಮಗಾರಿಗಳು ಕುಂಠಿತವಾಗಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ನೀರು ಶುದ್ಧೀಕರಣ ಘಟಕಗಳ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಬಾಕಿ ಇರುವ ಓವರ್ಹೆಡ್ ಟ್ಯಾಂಕ್ಗಳ ಪೈಪ್ಲೈನ್ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಈ ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಗ್ರಾಮೀಣ ಜನತೆಗೆ ಗುಣಮಟ್ಟದ ನೀರು ಉಪಯೋಗಕ್ಕೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಚ್.ಎಸ್.ಕೀರ್ತನಾ ಮಾತನಾಡಿ, ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಎಲ್ಲ ಕಾಮಗಾರಿಗಳಿಗೆ ವಿವಿಧ ತಾಂತ್ರಿಕ ಸಮಸ್ಯೆಗಳಾಗಿವೆ. ಅಲ್ಲದೆ, ಅರಣ್ಯ, ಕಂದಾಯ, ಲೋಕೋಪಯೋಗಿ ಹಾಗೂ ರೈಲ್ವೆ ಇಲಾಖೆಗಳಿಂದ ಈ ಕಾಮಗಾರಿಗಳಿಗೆ ಅಗತ್ಯ ಜಾಗ ದೊರೆತಿಲ್ಲ. ಹಲವು ಕಡೆ ಅನುಮತಿ ಸಿಗದೆ ವಿಳಂಬವಾಗಿದೆ. ಅನುಮೋದನೆಗೊಂಡಿರುವ ವಸತಿಗಳ ಸಂಖ್ಯೆ ಹಾಗೂ ಜನವಸತಿಗಳಲ್ಲಿರುವ ಸಂಖ್ಯೆಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ. ಈ ಬಗ್ಗೆ ಆಯಾ ಗ್ರಾ.ಪಂ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.
ಜಲಜೀವನ್ ಮಿಷನ್ ಯೋಜನೆಯಲ್ಲಿ ಪ್ರತೀ ಮನೆಗಳ ನಲ್ಲಿ ಸಂಪರ್ಕದಲ್ಲಿ ಅಳವಡಿಸುವ ಮೀಟರ್ಗಳು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ನಿರಂತರ ನೀರು ಪೂರೈಕೆ ಮಾಡಿ ನೀರಿನ ಕರ-ತೆರಿಗೆಯನ್ನು ನಿಗದಿಪಡಿಸುವ ವಿಚಾರದಲ್ಲಿ ಆಯಾ ಗ್ರಾ.ಪಂ.ಗಳೇ ಜವಾಬ್ದಾರಿ ಹಾಗೂ ಗ್ರಾಮೀಣ ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ಕೊರೆಯಲಾದ ಕೊಳವೆ ಬಾವಿಗಳು, ಜಲ ಸಂಗ್ರಹಾಗಾರಗಳು, ನೀರಿನ ವ್ಯವಸ್ಥೆಗೆ ಅಳವಡಿಸಿರುವ ಪೈಪ್ಲೈನ್ಗಳು ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು. ಕಲುಷಿತ ನೀರು ಪೈಪ್ಲೈನ್ಗಳಲ್ಲಿ ಸೇರಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಮಳೆಯ ನೀರು ಕಲುಷಿತ ನೀರಿನೊಂದಿಗೆ ಬೆರೆತು ಜಲಮೂಲಗಳಿಗೆ ಸೇರುವ ಸಾಧ್ಯತೆ ಇದೆ ಎಂದ ಅವರು, ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಸರಬರಾಜಾಗುವ ನೀರಿನ ಮಾದರಿಗಳನ್ನು ಪರೀಕ್ಷಿಸಿ ಗುಣಮಟ್ಟದ ಬಗ್ಗೆ ಖುದ್ದು ಖಚಿತಪಡಿಸಿಕೊಳ್ಳಬೇಕು. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಪರಿಶೀಲಿಸಬೇಕು. ಗ್ರಾ.ಪಂ. ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಜನವಸತಿಗಳಿಗೆ ಸುರಕ್ಷಿತ ಕುಡಿಯುವ ನೀರು ಪೂರೈಕೆಗಾಗಿ ಯೋಜನೆಯ ಸಮರ್ಪಕ ನಿರ್ವಹಣೆ ಬಗ್ಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸೂಚಿಸಿದರು.
ಕೇಂದ್ರ ಸರ್ಕಾರದ ನೋಡಲ್ ಅಧಿಕಾರಿ ಅನ್ಬಳಗನ್, ಮುಖ್ಯ ಇಂಜಿನಿಯರ್ ಅನಿಲ್ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಚಿದಾನಂದ್ ಸ್ವಾಗತಿಸಿ, ವಂದಿಸಿದರು.
Notice to complete multi-village drinking water project work
Leave a comment