ಕೊಪ್ಪ: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದವರನ್ನು ಸಮಾಧಾನಪಡಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಫೋನ್ ಕಸಿದು ನೆಲಕ್ಕೆ ಒಡೆದು ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಒಬ್ಬ ಯುವಕ ಸೇರಿದಂತೆ ಮೂವರ ವಿರುದ್ಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 21ರಂದು ಸಂಜೆ ಸುಮಾರು 5 ಗಂಟೆಗೆ ಕೊಪ್ಪ ಪೊಲೀಸ್ ಠಾಣೆಯ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಸಿಪಿಸಿ 701 ಪ್ರಕಾಶ್ ಅವರು ಮಫ್ತಿ ಉಡುಪಿನಲ್ಲಿ ಬಸ್ ನಿಲ್ದಾಣದ ಸುತ್ತಮುತ್ತ ರೌಂಡ್ಸ್ ನಡೆಸುತ್ತಿದ್ದರು. ಈ ವೇಳೆ ಜೆಎಂಜೆ ಆಟೋ ನಿಲ್ದಾಣದ ಬಳಿ ಮೂವರು ಯುವಕರು ಪರಸ್ಪರ ಕೈಕೈ ಮಿಲಾಯಿಸಿಕೊಂಡು, ಕೊರಳಪಟ್ಟಿ ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿಕೊಳ್ಳುತ್ತಾ ಗಲಾಟೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ದೊರೆತಿದೆ.
ತಕ್ಷಣ ಸ್ಥಳಕ್ಕೆ ತೆರಳಿದ ಪ್ರಕಾಶ್ ಅವರು ತಾವು ಪೊಲೀಸ್ ಸಿಬ್ಬಂದಿ ಎಂದು ಪರಿಚಯಿಸಿಕೊಂಡು ಗಲಾಟೆ ನಿಲ್ಲಿಸುವಂತೆ ಸೂಚನೆ ನೀಡಿದರೂ, ಯುವಕರು ಅದನ್ನು ಲೆಕ್ಕಿಸದೆ ಮತ್ತೆ ಜಗಳ ಮುಂದುವರಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಕೆಂಪು ಬಣ್ಣದ ಟಿ-ಶರ್ಟ್ ಧರಿಸಿದ್ದ ಯುವಕನನ್ನು ಪ್ರಶ್ನಿಸಿದಾಗ ಆತ ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆಯ ವಿಡಿಯೊ ಚಿತ್ರೀಕರಿಸಲು ಪ್ರಕಾಶ್ ಅವರು ತಮ್ಮ ಮೊಬೈಲ್ ತೆಗೆದಾಗ, ಆರೋಪಿತ ಯುವಕ ಮೊಬೈಲ್ ಕಸಿದು ನೆಲಕ್ಕೆ ಒಡೆದು ಹಾಕಿದ್ದಾನೆ. ಬಳಿಕ ಆತನೊಂದಿಗೆ ಇದ್ದ ಇನ್ನಿಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ವಶಕ್ಕೆ ಪಡೆದು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ. ವಿಚಾರಣೆ ವೇಳೆ ಆತ ತನ್ನ ಹೆಸರನ್ನು ನಿತಿನ್ (24), ನಾಗೇಶ್ ಅವರ ಪುತ್ರ, ನರಸೀಪುರ-ನಾರ್ವೆ ನಿವಾಸಿ ಎಂದು ತಿಳಿಸಿದ್ದಾನೆ.
ಬಳಿಕ ಆರೋಪಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಮೊಬೈಲ್ ಹಾನಿಗೊಳಿಸುವುದು ಹಾಗೂ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿದ ಆರೋಪದಡಿ ನಿತಿನ್ ಹಾಗೂ ಆತನೊಂದಿಗೆ ಇದ್ದ ಇನ್ನಿಬ್ಬರ ವಿರುದ್ಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Obstruction of police duty – Case filed against three at Koppa police station
Leave a comment