ಚಿಕ್ಕಮಗಳೂರು: ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಎಲ್ಲಾ ಶೋಷಿತ ವರ್ಗದ ಜನರ ಸಮ ಸಮಾಜ ನಿರ್ಮಾಣವಾಗಬೇಕೆಂದರೆ ಶಿಕ್ಷಣ ಪಡೆಯುವುದು ಅಗತ್ಯ. ದೀಕ್ಷಾ ಭೂಮಿ ಯಾತ್ರಿಕರು ಪ್ರವಾಸಕ್ಕಾಗಿ ಮಾತ್ರ ತೆರಳದೆ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅರಿತುಕೊಂಡು ಜನರಲ್ಲಿ ಅರಿವು ಮೂಡಿಸಬೇಕು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಇಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ೨೨೨ ಅನುಯಾಯಿಗಳನ್ನು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ನಾಗಪುರದ ದೀಕ್ಷಾಭೂಮಿಗೆ ಯಾತ್ರೆ ಕರೆದೊಯ್ಯವ ಬಸ್ಗೆ ಚಾಲನೆ ನೀಡಿ ಅವರು ಮಾತನಾಡಿ ಇಡೀ ವಿಶ್ವ ಮೆಚ್ಚುವ ಸಂವಿಧಾನ ರಚಿಸಿರುವ ಡಾ.ಅಂಬೇಡ್ಕರ್ ಅವರ ಪಂಚಧಾಮಗಳಲ್ಲಿ ಒಂದಾಗಿರುವ ನಾಗಪುರ ದೀಕ್ಷಾ ಭೂಮಿಯಲ್ಲಿರುವ ಡಾ.ಅಂಬೇಡ್ಕರ್ ವಿಚಾರಧಾರೆಗಳನ್ನು ೨೨೨ ಮಂದಿ ಯಾತ್ರಿಕರು ಸ್ವತಃ ಅರಿತುಕೊಂಡು ಆ ವಿಚಾರಧಾರೆಯನ್ನು ತಲಾ ಕನಿಷ್ಠ ೧೦ ಜನರಿಗೆ ತಲುಪಿಸಿದಲ್ಲಿ ೨.೨೦೦ ಜನಕ್ಕೆ ತಲುಪುತ್ತದೆ ಎಂದು ಹೇಳಿದರು.
ಸಾಕ್ಷರತೆಯಲ್ಲಿ ದೇಶದಲ್ಲಿ ಕೇರಳ ಮೊದಲ ಸ್ಥಾನದಲ್ಲಿದ್ದರೆ, ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕೆಂಬ ಅಂಬೇಡ್ಕರ್ ಅವರ ಆಶಯದಂತೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹದೇವಪ್ಪ ಈ ಯೋಜನೆಯನ್ನು ರೂಪಿಸಿದ್ದಾರೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ಅವರ ವಿಚಾರಗಳನ್ನು ಮನೆ ಮನೆಗೆ ಮುಟ್ಟಿಸುವ ಕೆಲಸವನ್ನು ದೀಕ್ಷಾಭೂಮಿ ಯಾತ್ರಾರ್ಥಿಗಳು ಮಾಡಬೇಕು ಎಂದ ಅವರು, ನಮ್ಮ ಸರ್ಕಾರ ಬಂದ ಮೂರು ವರ್ಷದಿಂದಲೂ ಈ ಯಾತ್ರೆಗೆ ವಾಹನ ವ್ಯವಸ್ಥೆಯನ್ನು ಮಾಡಲಾಗಿದೆ. ನಮ್ಮ ಸರ್ಕಾರ ಬಡವರು, ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು ಹಾಗೂ ಎಲ್ಲಾ ಜನಾಂಗದ ಬಡವರ ಪರ ಇರುವ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ಇದು ಒಂದು ಯೋಜನೆಯಾಗಿದ್ದು, ಯಾತ್ರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ವಾಹನ ಚಾಲಕರು ಹಾಗೂ ನಿರ್ವಾಹಕರು ಆದಷ್ಟೂ ಸುರಕ್ಷಿತವಾಗಿ ವಾಹನ ಚಾಲನೆ ಮಾಡುವಂತೆ ತಿಳಿಸಿದ ಅವರು ರಾಜಹಂಸ ಬಸ್ಗಿಂತ ಉತ್ತಮವಾದ ಬಸ್ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.
ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮಾತನಾಡಿ, ಐದು ದಿನದ ಯಾತ್ರಿಕರು ನಾಗಪುರ ದೀಕ್ಷಾಭೂಮಿ ಯಾತ್ರೆಯ ಅನುಭವ ಜೀವನ ಪರ್ಯಂತ ಸ್ಮರಣೆಯಲ್ಲಿ ಉಳಿಯಲಿದೆ. ಅಲ್ಲಿ ನಡೆಯುವ ದೀಕ್ಷಾ ಬೋಧನೆಯ ಬಗ್ಗೆ ಅರಿತುಕೊಂಡು ಇಲ್ಲಿ ಹೆಚ್ಚು ಪ್ರಚಾರ ನೀಡುವಂತೆ ಸಲಹೆ ನೀಡಿದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಬಿ.ಮಾಲತಿ ಸ್ವಾಗತಿಸಿದರು. ನಗರಸಭೆ ಅಧ್ಯಕ್ಷೆ ಶೀಲಾದಿನೇಶ್, ಉಪಾಧ್ಯಕ್ಷರಾದ ಲಲಿತಾ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ರೇವಣ್ಣ ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
Pilgrimage to Nagpur’s Deeksha Bhoomi begins
Leave a comment