ಚಿಕ್ಕಮಗಳೂರು: ಪೂರ್ವ ಮುಂಗಾರು ಮಳೆ ಬಿಟ್ಟು ಬಿಡದೇ ನಿರಂತರವಾಗಿ ಅಬ್ಬರಿಸುತ್ತಿದ್ದು, ಜಿಲ್ಲೆಯ ಮಲೆನಾಡು ಹಾಗೂ ಬಯಲು ಭಾಗದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು ಮಂಜುಮುಸುಕಿದ ವಾತಾವರಣ ಅವಘಡಗಳು ಜರುಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ನಡುವೆ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ನಡೆದಿದೆ.
ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ಕೆಎಸ್ಆರ್ಟಿಸಿ ಬಸ್ ರಸ್ತೆ ಪಕ್ಕದ ಗದ್ದೆಗೆ ನುಗ್ಗಿದೆ.
ಬಸ್ಸಿನಲ್ಲಿದ್ದವರು ಅನಾಹುತದಿಂದ ಪಾರಾಗಿದ್ದಾರೆ. ಈ ಮಾರ್ಗವು ಚಿಕ್ಕಮಗಳೂರಿನಿಂದ ದಕ್ಷಿಣ ಕನ್ನಡಕ್ಕೆ ಸಂಪರ್ಕ ನೀಡುವ ರಸ್ತೆಯಾಗಿದೆ ಕಳೆದ ಎರಡು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರು ಪರದಾಡುವಂತಾಗಿದೆ.
ಕಳೆದ ರಾತ್ರಿಯಿಂದಲೇ ಜೋರು ಮಳೆ ಆರಂಭವಾಗಿದ್ದು, ಎಡಬಿಡದೆ ಸುರಿಯುತ್ತಿದೆ. ಕುದುರೆಮುಖ, ಕಳಸ, ಶೃಂಗೇರಿ, ಕೆರೆಕಟ್ಟೆ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಕೊಟ್ಟಿಗೆಹಾರ, ಬಣಕಲ್, ಮೂಡಿಗೆರೆ, ಆಲ್ಲೂರು, ಎನ್.ಆರ್.ಪುರ, ಚಿಕ್ಕಮಗಳೂರು ನಗರ, ಮುಳ್ಳಯ್ಯನಗಿರಿ, ಬಾಬಾಬಡುನ್ಗಿರಿ, ಅತ್ತಿಗುಂಡಿ, ಕೆಮ್ಮಣ್ಣುಗುಂಡಿ, ಕಡೂರು, ತರೀಕೆರೆ, ಲಿಂಗದಹಳ್ಳಿ ಸುತ್ತಮುತ್ತ ಮಳೆ ಸುರಿಯುತ್ತಿದೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಯಿಂದ ಇಂದು ಬೆಳಗ್ಗೆವರೆಗೂ ಮೂರು ಇಂಚು ಮಳೆಯಾಗಿದೆ. ತಾಲೂಕಿನ ಚಾರ್ಮಾಡಿ ಘಾಟ್ ತಪ್ಪಲು, ಕೊಟ್ಟಿಗೆಹಾರ, ಬಾಳೂರು, ಬಣಕಲ್, ದೇವರಮನೆಗಳಲ್ಲಿ ಭಾರೀ ಮಳೆಯಾಗಿದೆ.
ಇಂದು ಕೂಡ ಮೋಡ ಕವಿದ ವಾತಾವರಣವಿದ್ದು ಧಾರಾಕಾರ ಮಳೆಯಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಹೆಚ್ಚಾಗಿದ್ದ ಕಾರಣ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ವಾಹನ ಸವಾರರು ಪರದಾಡುವಂತಾಯಿತು.
ಚಿಕ್ಕಮಗಳೂರು ನಗರದಲ್ಲಿ ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.ಹವಾಮಾನ ಇಲಾಖೆ ವರದಿಯ ಮುನ್ಸೂಚನೆಯ ಪ್ರಕಾರ, ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮುಂದಿನ ೩ ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗಲಿದೆ.
ಅದರಲ್ಲೂ ನಾಳೆ ಬುಧವಾರ (ಮೇ ೨೧) ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ. ಸೈಕ್ಲೋನ್ ಪ್ರಭಾವದಿಂದ ಚಿಕ್ಕಮಗಳೂರಿನಲ್ಲಿ ಮೇ ೨೧ರಿಂದ ಮುಂದಿನ ೨ ದಿನ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್: ಜಿಲ್ಲಾಡಳಿತ ಅಗತ್ಯ ಮುಂಜಾಗೃತಾ ಕ್ರಮ: ಯೆಲ್ಲೋ ಅಲರ್ಟ್ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ೨ ದಿನಗಳು ಹೆಚ್ಚಿನ ಮಳೆಯಾಗುವ ಸಾದ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಮೇ ೨೧ ರಂದು ರೆಡ್ ಅಲರ್ಟ್ ಹಾಗೂ ಮೇ ೨೨ ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಿದ್ದು, ಸಾರ್ವಜನಿಕರಿಗೆ ಮುಂದಿನ ಎರಡು ದಿನಗಳು ಅಥವಾ ಮಳೆ ಕಡಿಮೆಯಾಗುವವರೆಗೆ ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಕೋರಲಾಗಿದೆ.
ಸಾರ್ವಜನಿಕರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸುವುದು. ಸಾರ್ವಜನಿಕರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ. ಕೆರೆ ಕಟ್ಟೆಗಳಿಗೆ ತೆರಳಬಾರದು. ಹಾಗೂ ಮಳೆಯಿಂದಾಗಿ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಸಾರ್ವಜನಿಕರು ಎಚ್ಚರ ವಹಿಸುವುದು ಈ ಸೂಚನೆಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಲು ಕೋರಿದೆ
ಹೆಚ್ಚಿನ ಮಾಹಿತಿಗಾಗಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ-೦೮೨೬೨-೨೩೮೯೫೦ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ತಿಳಿಸಿದ್ದಾರೆ.
Pre-monsoon rains in the district
Leave a comment