ಚಿಕ್ಕಮಗಳೂರು: ಮೂರು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ರಸ್ತೆ ಅಭಿವೃದ್ಧಿ, ಸೇತುವೆ, ಬಸ್ ನಿಲ್ದಾಣ ನಿರ್ಮಾಣ ಸೇರಿ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯಲ್ಲೂ ಮುಂಚೂಣಿ ಸಾಧಿಸಲಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ₹50 ಕೋಟಿ ಮಂಜೂರಾಗಿದೆ. ಇದರಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆಗಳಿಗೆ ₹17 ಕೋಟಿ, ಚಿಕ್ಕಮಗಳೂರು ನಗರದ ರಸ್ತೆಗಳಿಗೆ ₹10.50 ಕೋಟಿ, ಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ ₹7.50 ಕೋಟಿ, ದೇವಸ್ಥಾನಗಳ ಅಭಿವೃದ್ಧಿಗೆ ₹4 ಕೋಟಿ, ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ₹10 ಕೋಟಿ, ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ₹1 ಕೋಟಿ ಅನುದಾನ ನೀಡಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಲೋಕೋಪಯೋಗಿ ಇಲಾಖೆಯಿಂದ ಕಾಲುಸಂಕ ನಿರ್ಮಾಣಕ್ಕೆ ₹2.20 ಕೋಟಿ ಅನುದಾನ ಮಂಜೂರಾಗಿದೆ. ಕಬ್ಬಳ್ಳಿ, ಕ್ಯಾತನಬೀಡು ಹಾಗೂ ಜೋಡಿಲಿಂಗದಹಳ್ಳಿ ಸೇತುವೆಗಳ ನಿರ್ಮಾಣಕ್ಕೆ ₹10 ಕೋಟಿ, ರಾಜ್ಯ ಹೆದ್ದಾರಿ ಕಾಮಗಾರಿಗೆ ₹9.99 ಕೋಟಿ, ತಡೆಗೋಡೆ ಕಾಮಗಾರಿಗಳಿಗೆ ₹4.45 ಕೋಟಿ ಅನುದಾನ ಸರ್ಕಾರದಿಂದ ಬಂದಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹17 ಕೋಟಿ, ಮಳೆ ಹಾನಿ ಕಾಮಗಾರಿಗಳಿಗೆ ₹5 ಕೋಟಿ ಮಂಜೂರು ಮಾಡಲಾಗಿದೆ. ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಹೆಚ್ಚುವರಿ ಕಾಮಗಾರಿಗಳಿಗೆ ₹6.27 ಕೋಟಿ ಬಿಡುಗಡೆಯಾಗಿದೆ ಎಂದು ತಿಳಿಸಿದರು. ನಗರದಲ್ಲಿ ಸುಸಜ್ಜಿತ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ₹19.87 ಕೋಟಿ ಬಂದಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಮಳೆ ಮತ್ತು ಪ್ರವಾಹದಿಂದ ಹಾನಿಗೀಡಾದ ಗ್ರಾಮೀಣ ರಸ್ತೆ, ಸೇತುವೆ ಮತ್ತು ಚರಂಡಿ ಕಾಮಗಾರಿಗಳಿಗೆ ₹10 ಕೋಟಿ ಬಿಡುಗಡೆಯಾಗಿದೆ ಎಂದು ವಿವರಿಸಿದರು.
ಪ್ರಗತಿ ಪಥ ಯೋಜನೆಯಡಿ ₹22 ಕೋಟಿ ಮಂಜೂರಾಗಿದ್ದು, ಜಿಲ್ಲೆಯ 30 ಕಿ.ಮೀ ಸರ್ವಋತು ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಾಗಲಿದೆ. ಜಿಲ್ಲಾಧಿಕಾರಿ ಕಚೇರಿ ಕಟ್ಟಡ ನಿರ್ಮಿಸಲು ಈ ಹಿಂದೆ ₹30 ಕೋಟಿಗೆ ಅನುಮೋದನೆಯಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಬಂದ ನಂತರ ಹೆಚ್ಚುವರಿ ₹26.48 ಕೋಟಿ ಅನುದಾನಕ್ಕೆ ಮಂಜೂರಾತಿ ನೀಡಲಾಗಿದೆ. ₹15.35 ಕೋಟಿ ಬಿಡುಗಡೆಯೂ ಆಗಿದೆ ಎಂದರು.
ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲದಿದ್ದರೆ ಗ್ಯಾರಂಟಿ ಯೋಜನೆಗಳ ಜತೆಗೆ ರಸ್ತೆ ಸೇರಿ ಮೂಲಸೌಕರ್ಯ ಅಭಿವೃದ್ಧಿ ಹೇಗೆ ಸಾಧ್ಯವಾಗುತ್ತಿತ್ತು. ಸರ್ಕಾರ ಆರ್ಥಿಕವಾಗಿ ಸಮರ್ಥವಾಗಿದೆ ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಾನಂದಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಮುಖಂಡರಾದ ನಯಾಜ್ ಅಹಮದ್, ಮಲ್ಲೇಶ್, ಶಿವಕುಮಾರ್ ಹಿರೇಗೌಜ, ರೂಬಿನ್ ಮೋಸಸ್ ಉಪಸ್ಥಿತರಿದ್ದರು.
Priority given to infrastructure over three years
Leave a comment