ಚಿಕ್ಕಮಗಳೂರು: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಡೂರು ಹಾಗೂ ಚಿಕ್ಕಮಗಳೂರು ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.
ನಗರದ ಆಜಾದ್ ಪಾರ್ಕ್ನಲ್ಲಿ ಬುಧವಾರ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ಹಾಗೂ ಚಿಕ್ಕಮಗಳೂರು ತಾಲ್ಲೂಕುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಎರಡೂ ತಾಲ್ಲೂಕುಗಳಲ್ಲೂ ಮಳೆ ಕೊರತೆಯಿಂದ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ಕೂಡಲೇ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮುಂಗಾರು ಮಳೆ ಸಮರ್ಪಕವಾಗಿ ಆಗದ ಪರಿಣಾಮ ಬಿತ್ತನೆ ಮಾಡಿರುವ ಬೆಳೆಗಳಿಗೆ ನೀರಿನ ಕೊರತೆ ಎದುರಾಗಿದೆ. ಹಲವು ಭಾಗಗಳಲ್ಲಿ ಕೆರೆ-ಕಟ್ಟೆಗಳು ಬತ್ತಿದ್ದು, ಅಂತರ್ಜಲ ಮಟ್ಟ ಕುಸಿದಿದೆ. ಕೃಷಿಗೆ ಅಗತ್ಯ ನೀರು ದೊರೆಯದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟದ ಭೀತಿಯಲ್ಲಿರುವ ರೈತರಿಗೆ ಸರ್ಕಾರ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಗ್ರಾಮವಾರು ಬರ ಪರಿಸ್ಥಿತಿಯ ಸಮೀಕ್ಷೆ ನಡೆಸಬೇಕು. ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಕಡೂರು ಹಾಗೂ ಚಿಕ್ಕಮಗಳೂರನ್ನು ಸೇರಿಸಿ, ರೈತರಿಗೆ ಅಗತ್ಯ ಪರಿಹಾರ ನೀಡಬೇಕು. ಕೃಷಿ ಸಾಲದ ಮೇಲಿನ ಬಡ್ಡಿ ಸೇರಿದಂತೆ ರೈತರ ಆರ್ಥಿಕ ಹೊರೆಯನ್ನು ಕಡಿಮೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಮನವಿ ಮಾಡಿದರು.
ಬೆಳೆ ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ, ಬೆಳೆ ವಿಮೆ ಹಣ ದೊರೆಯುವಂತೆ ಕ್ರಮ, ಬರಪರಿಹಾರ ಕಾಮಗಾರಿಗಳ ಮೂಲಕ ಉದ್ಯೋಗ ಹಾಗೂ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಗೆ ವೇಗ ನೀಡಬೇಕು ಎಂದು ರೈತ ಸಂಘ ಒತ್ತಾಯಿಸಿತು.
ಕಡೂರು ಮತ್ತು ಚಿಕ್ಕಮಗಳೂರು ತಾಲ್ಲೂಕುಗಳ ವಾಸ್ತವ ಬರ ಪರಿಸ್ಥಿತಿಯನ್ನು ಪರಿಗಣಿಸಿ ತಕ್ಷಣ ಬರಪೀಡಿತ ಪಟ್ಟಿಗೆ ಸೇರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡ ಗುರುಶಾಂತಪ್ಪ, ರೈತ ಸಂಘದ ಜಿಲ್ಲಾಧ್ಯಕ್ಷ ಡಿ. ಮಹೇಶ್, ಗೌರವಾಧ್ಯಕ್ಷ ಎಂ.ಸಿ. ಬಸವರಾಜ, ಪ್ರಧಾನ ಕಾರ್ಯದರ್ಶಿ ಎಂ.ಬಿ. ಭದ್ರಕವರ್, ಉಪಾಧ್ಯಕ್ಷ ದೇವರಾಜೇಗೌಡ, ಸಂಚಾಲಕ/ಕಾರ್ಯದರ್ಶಿ ಮಧುಶೇಖರ್, ಜಿಲ್ಲಾ ವಕ್ತಾರ ಶಿವಣ್ಣ ಜೆ.ಎಸ್., ತಾಲ್ಲೂಕು ಅಧ್ಯಕ್ಷ ಭದ್ರೇಗೌಡ, ತಾಲ್ಲೂಕು ವಕ್ತಾರ ಕೆ.ಟಿ. ಸುನೀಲ್ ಕುಮಾರ್, ಉಪಾಧ್ಯಕ್ಷ ದಯಾನಂದ್ ಜಿ., ಸಂಚಾಲಕ ಸಿದ್ದೇಗೌಡ, ತಾಲ್ಲೂಕು ಸಂಚಾಲಕಿ ನಿರ್ಮಲ, ಸಿ.ಎನ್. ಈಶ್ವರಪ್ಪ, ಯುವ ರೈತ ಸಂಘದ ಜಿಲ್ಲಾಧ್ಯಕ್ಷ ಯುವರಾಜ್, ಸಂಚಾಲಕಿ ರಾಧಮ್ಮ ಜಿ., ಉಪಾಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಚಂದ್ರಶೇಖರ್ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.
Protest by Karnataka State Farmers’ Association-Green Army
Leave a comment