ಚಿಕ್ಕಮಗಳೂರು: ಶರಾವತಿ ಯೋಜನೆಯಲ್ಲಿ ಪ್ರಸ್ತುತ ಉತ್ಪಾದನೆಯಾಗುತ್ತಿರುವ ೧೦೦೦ ಮೆಗಾವ್ಯಾಟ್ ವಿದ್ಯುತ್ ಅಲ್ಲದೆ, ಹೆಚ್ಚುವರಿಯಾಗಿ ೨೦೦೦ ಮೆಗಾವ್ಯಾಟ್ ಸೇರಿ ಒಟ್ಟು ೩೦೦೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಅವಕಾಶ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ತರೀಕೆರೆ ತಾಲ್ಲೂಕು ಲಕ್ಕವಳ್ಳಿ ಗ್ರಾಮದಲ್ಲಿ ಇಂದು ೩೦ ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ವಿದ್ಯುತ್ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಲಹೆಯ ಮೇರೆಗೆ ವಿದ್ಯುತ್ ಅನ್ನು ಪಂಪ್ ಸ್ಟೋರೇಜ್ ಮಾಡಲು ಅವಕಾಶ ಕಲ್ಪಿಸಿಕೊಳ್ಳಬಹುದಾಗಿದೆ. ಈ ವ್ಯವಸ್ಥೆಯಲ್ಲಿ ಶರಾವತಿ ಮತ್ತು ವಾರಾಹಿ ಯೋಜನೆಗಳಲ್ಲಿ ವಿದ್ಯುತ್ ಉತ್ಪಾದನೆಗೆ ಬಳಕೆಯಾದ ನೀರನ್ನು ಮರು ಬಳಕೆ ಮಾಡುವ ತಂತ್ರಜ್ಞಾನವನ್ನು ಉಪಯೋಗಿಸಲಾಗುತ್ತಿದೆ ಎಂದು ಹೇಳಿದರು.
ಪ್ರಸ್ತುತ ರೂಪಿಸಲಾಗಿರುವ ಯೋಜನೆಯಲ್ಲಿ ನದಿಯಲ್ಲಿ ನೀರಿರುವುದಿಲ್ಲ. ಅರಣ್ಯ ಪ್ರದೇಶವೆಲ್ಲ ಮುಳುಗಡೆಯಾಗುತ್ತದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಯಾವುದೇ ಅರಣ್ಯ ಪ್ರದೇಶ ಈ ಯೋಜನೆಯಲ್ಲಿ ಮುಳುಗಡೆಯಾಗುವುದಿಲ್ಲ. ಪಂಪ್ ಸ್ಟೇಷನ್ಗಾಗಿ ೧೨೦ ಎಕರೆ ಪ್ರದೇಶದಲ್ಲಿ ಪೈಪ್ಲೈನ್ ಅಳವಡಿಸುವ ಕಾರ್ಯವನ್ನು ಮಾತ್ರ ನಿರ್ವಹಿಸಲಾಗುತ್ತದೆ. ಅನಂತರ ಅದನ್ನು ಮುಚ್ಚಲಾಗುತ್ತದೆ. ಪರಿಸರ ಸ್ನೇಹಿಯಾಗಿ ರೂಪಿಸುವ ಈ ಯೋಜನೆ ಕಾರ್ಯಗತಕ್ಕೆ ನಾಲ್ಕು ವರ್ಷಗಳ ಕಾಲಾವಕಾಶ ಬೇಕಾಗುತ್ತದೆ ಎಂದರು.
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಸಾಕಷ್ಟು ವಿದ್ಯುತ್ ಶೇಖರಣೆ ಮಾಡಲಾಗಿದೆ. ಹೀಗಿದ್ದರೂ ಸಹ ತಮ್ಮ ಸರ್ಕಾರ ವಿದ್ಯುತ್ ಉತ್ಪಾದನೆಯ ಜೊತೆಗೆ ನೆರೆ ರಾಜ್ಯಗಳಿಂದ ಖರೀದಿಸುವ ಮೂಲಕ ಸಾಕಷ್ಟು ವಿದ್ಯುತ್ ಸಂಗ್ರಹಣೆ ಮಾಡಿಕೊಳ್ಳಲಾಗಿದೆ. ಏಷ್ಯಾದಲ್ಲಿಯೇ ದೊಡ್ಡದಾದ ಪಾವಗಡದ ರೈತರ ಸಹಭಾಗಿತ್ವದ ಸೋಲಾರ್ ಪಾರ್ಕ್ನಲ್ಲಿ ೨೦೦೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಅವಕಾಶವಾಗಿದೆ. ಇಲ್ಲಿ ೧೦ ಸಾವಿರ ಎಕರೆ ಪ್ರದೇಶವನ್ನು ಈ ಯೋಜನೆಗೆ ಬಳಸಿಕೊಳ್ಳಲಾಗಿದೆ ಎಂದು ತಿಳಿಸಿದ ಅವರು, ಇನ್ನೂ ರೈತರು ವಿದ್ಯುತ್ ಉತ್ಪಾದನೆಗೆ ಭೂಮಿ ನೀಡಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಜಿ.ಹೆಚ್.ಶ್ರೀನಿವಾಸ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಬ್ದುಲ್ ರೆಹಮಾನ್, ಉಪಾಧ್ಯಕ್ಷರಾದ ಜಿ.ಭವಾನಿ, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ಸಹ ನಿರ್ದೇಶಕರಾದ ಆರೋಗ್ಯ ಇಲಾಖೆಯ ಸಹ ಜಿಲ್ಲಾ ನೋಡಲ್ ಅಧಿಕಾರಿ ಡಾ.ಚಂದ್ರಿಕಾ, ಭಾಗವಹಿಸಿದ್ದರು.
Sharavati project to generate 3000 MW of electricity
Leave a comment