ಚಿಕ್ಕಮಗಳೂರು: ಓಲೈಕೆ ರಾಜಕಾರಣಕ್ಕಾಗಿ ಬೆಂಗಳೂರಿನ ಕೋಗಿಲು ಪ್ರಕರಣದಲ್ಲಿ ಅನಾಮದೇಯರಿಗೆ ಮನೆ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಜಿಲ್ಲೆಯಲ್ಲಿ ಅತಿವೃಷ್ಟಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಬಿಜೆಪಿ ಆರೋಪಿಸುತ್ತದೆ ಎಂದು ಪಕ್ಷದ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ತಿಳಿಸಿದ್ದಾರೆ.
ಈ ಹೇಳಿಕೆ ನೀಡಿ ರಾಜಧಾನಿ ಬೆಂಗಳೂರಿನ ಸರ್ಕಾರಿ ಜಾಗದಲ್ಲಿ ಶೆಡ್ಡುಗಳನ್ನು ಅಕ್ರಮವಾಗಿ ನಿರ್ಮಿಸಿಕೊಂಡಿದ್ದನ್ನು ತೆರವುಗೊಳಿಸಿದ್ದಕ್ಕೆ ಪರ್ಯಾಯವಾಗಿ ಅಲ್ಲಿನ ಅನಾಮದೇಯರಿಗೆ ಮನೆಗಳನ್ನು ನೀಡಲು ಮುಂದಾಗಿರುವುದು ಓಲೈಕೆ ರಾಜಕಾರಣಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿಕೆಯಲ್ಲಿ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅತಿವೃಷ್ಟಿಯಿಂದ ಕಳೆದ ವರ್ಷ ಒಂದರಲ್ಲೇ ಒಟ್ಟು ೩೭೭ ಮನೆಗಳು ಹಾನಿಗೆ ಒಳಗಾಗಿದ್ದು, ೧೭೮ ಮನೆಗಳು ಭಾಗಶಃ ಹಾನಿಗೊಂಡಿದ್ದರೆ, ೧೯೯ ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿವೆ. ನೆಪಮಾತ್ರಕ್ಕೆ ಸಣ್ಣ ಪ್ರಮಾಣದ ಪರಿಹಾರ ನೀಡಿ ಕೈ ತೊಳೆದುಕೊಂಡಿರುವ ರಾಜ್ಯ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡಲು ಸರ್ಕಾರ ಯಾವುದೇ ಪ್ರಯತ್ನ ನಡೆಸದ ಪರಿಣಾಮ ಸಂತ್ರಸ್ತರು ಬೀದಿ ಪಾಲಾಗಿದ್ದಾರೆ ಎಂದು ಹೇಳಿದ್ದಾರೆ.
ಅದೇ ರೀತಿಯಲ್ಲಿ ೨೦೨೩ ಮತ್ತು ೨೦೨೪ರಲ್ಲಿ ಜಿಲ್ಲೆಯ ಮಲೆನಾಡು ಭಾಗದಲ್ಲಿ ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಅಂದಾಜು ೬೦೦ಕ್ಕೂ ಹೆಚ್ಚಿನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲಾಗಿಲ್ಲ. ಚಿಕ್ಕಮಗಳೂರು ನಗರದ ತಗ್ಗು ಪ್ರದೇಶಗಳಲ್ಲಿ ಮನೆ ಹಾನಿಗೊಂಡ ಸಂತ್ರಸ್ತರಿಗೂ ಪರ್ಯಾಯ ವ್ಯವಸ್ಥೆಯತ್ತ ರಾಜ್ಯ ಸರ್ಕಾರ ಗಮನಹರಿಸಿಲ್ಲ ಎಂದು ಆರೋಪಿಸಿದ್ದಾರೆ.
ಶೃಂಗೇರಿ ಪಟ್ಟಣದ ಗಾಂಧಿ ಮೈದಾನದಲ್ಲಿ ಹೊಟ್ಟೆ ಪಾಡಿಗಾಗಿ ದಶಕಗಳಿಂದ ಅವಲಂಬಿಸಿಕೊಂಡಿದ್ದ ೨೬ ಅಂಗಡಿಗಳನ್ನು ತೆರವುಗೊಳಿಸಿದ್ದು, ಅವಲಂಬಿತ ಕುಟುಂಬಗಳು ಬೀದಿಗೆ ಬಿದ್ದಿವೆ. ಆದರೆ, ರಾಜ್ಯ ಸರ್ಕಾರ ಅಂಗಡಿ ಕಳೆದುಕೊಂಡವರಿಗಾಗಿ ಪರ್ಯಾಯ ವ್ಯವಸ್ಥೆ ಮಾಡಿಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಿತ್ತಾಡುತ್ತಿರುವ ಸಿಎಂ, ಡಿಸಿಎಂ ರಾಜ್ಯದ ಆಡಳಿತವನ್ನು ಮೈ ಮರೆತಿದ್ದು, ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಹಳಿ ತಪ್ಪಿದೆ. ಬಳ್ಳಾರಿ ಪ್ರಕರಣ ಅದಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಡ್ರಗ್ಸ್ ದಂಧೆ ವ್ಯಾಪಕವಾಗಿದೆ. ಸಚಿವರ ಆಪ್ತರೆ ಭಾಗಿಯಾಗಿದ್ದಾರೆ, ಭ್ರಷ್ಟಾಚಾರ ಮಿತಿಮೀರಿದ್ದು, ಸಾಮಾನ್ಯ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ದೂರಿದ್ದಾರೆ
State government fails to provide rehabilitation in the district
Leave a comment