ಚಿಕ್ಕಮಗಳೂರು: ತರೀಕೆರೆ, ಕಡೂರು, ಅಜ್ಜಂಪುರ ತಾಲ್ಲೂಕಿನಲ್ಲಿ ಮಳೆ ಅಭಾವದಿಂದಾಗಿ ಬರಗಾಲದ ಸ್ಥಿತಿ ತಲೆದೋರಿದೆ. ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಭದ್ರಾ ಮೇಲ್ಡಂಡೆ ಯೋಜನೆ ನಾಲೆಗಳ ಮೂಲಕ ತಕ್ಷಣ ನೀರು ಹರಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಹಾಗೂ ಜಿಲ್ಲಾ ಉಸ್ತ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಜಿಲ್ಲೆಯ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಸ್ಥಿತಿಗತಿಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರ ಜೊತೆ ಅವರು ಮಾತನಾಡಿ, ಕುಡಿಯುವ ನೀರಿನ ವ್ಯವಸ್ಥೆ ಕಲಿಸುವ ಸಲುವಾಗಿ ಈಗಾಗಲೇ ೧ ಕೋಟಿ ರೂ, ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ನೀರಾವರಿ ಇಲಾಖೆ ಸಚಿವರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರ ಜೊತೆಗೆ ಚರ್ಚಿಸಿದ್ದು, ಇನ್ನೂ ಒಂದೆರಡು ದಿನದಲ್ಲಿ ಭದ್ರಾ ಮೇಲ್ಡಂಡೆ ಯೋಜನೆ ನಾಲೆಗಳಿಗೆ ಕುಡಿಯುವ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿ ಮೂಲಕ ಪ್ರಸ್ತಾವನೆ ಸಹ ಸಲ್ಲಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಬರಗಾಲ ಘೋಷಣೆಗೆ ಮಾನದಂಡಗಳಿದ್ದು, ಈಗಾಗಲೇ ಬರ ಕುರಿತು ಜಿಲ್ಲಾಧಿಕಾರಿ ಒಂದು ವರದಿ ಸಲ್ಲಿಸಿದ್ದಾರೆ. ಮತ್ತೊಂದು ವರದಿ ಸಲಿಸಿದ ನಂತರ ಮುಖ್ಯಮಂತ್ರಿ ಹಾಗೂ ಕಂದಾಯ ಇಲಾಖೆಯ ಸಚಿವರು ಬರ ಘೋಷಣೆ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ. ಬರ ಅಧ್ಯಯನದ ಕುರಿತು ಮುಖ್ಯಮಂತ್ರಿಗೆ ತಾವೂ ಸಹ ವರದಿ ಸಲ್ಲಿಸುತ್ತಿರುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ಕಳೆದ ತಿಂಗಳವರೆಗೆ ಕೇವಲ ೧೪೦ ಮಳೆ ಮಾಪನ ಕೇಂದ್ರಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದವು. ಇದೀಗ ದುರಸ್ತಿಪಡಿಸಿದ್ದು, ೨೨೧ ಮಳೆ ಮಾಪನ ಕೇಂದ್ರಗಳು ಈಗ ಕಾರ್ಯ ನಿವರ್ಹಿಸುತ್ತಿವೆ. ಮಿಕ್ಕ ೨೧ ಮಾಪನ ಕೇಂದ್ರಗಳನ್ನು ಒಂದೆರಡು ದಿನಗಳಲ್ಲಿ ದುರಸ್ತಿ ಆಗಲಿವೆ ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಸಚಿವರಿಗೆ ಮಾಹಿತಿ ನೀಡಿದರು.
ಶಾಸಕರಾದ ಜಿ.ಎಚ್.ಶ್ರೀನಿವಾಸ್, ಹೆಚ್.ಡಿ.ತಮ್ಮಯ್ಯ, ಕೆ.ಎಸ್.ಆನಂದ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಂಜೇಗೌಡ ಮೊದಲಾದವರಿದ್ದರು.
Steps to divert water through Bhadra upper canal to avoid water problems
Leave a comment