ಚಿಕ್ಕಮಗಳೂರು: ಬಿಡದಿ ಟೌನ್ಶಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಾಗೂ ರೈತರ ಭೂಮಿ ರಕ್ಷಣೆಗೆ ಆಗ್ರಹಿಸಿ ಆ.25ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕ ತಿಳಿಸಿದೆ.
ರೈತ ಸಂಘ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಡಿ.ಆರ್. ದುಗ್ಗಪ್ಪಗೌಡ ಮಾತನಾಡಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಬೈರಮಂಗಲ–ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂಹಿತರಕ್ಷಣಾ ಸಂಘದ ಜಂಟಿ ಆಶ್ರಯದಲ್ಲಿ ಈ ಹೋರಾಟ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿ–ಯುವಜನರು ಸೇರಿದಂತೆ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟನೆ ಮನವಿ ಮಾಡಿದೆ ಎಂದರು.
ಬಿಡದಿ ಭಾಗವು ಸಂಪೂರ್ಣ ನೀರಾವರಿ ಆಶ್ರಿತ ಪ್ರದೇಶವಾಗಿದ್ದು, ಫಲವತ್ತಾದ ಕೃಷಿ ಭೂಮಿಯನ್ನು ಹೊಂದಿದೆ. ಸಣ್ಣ ಮತ್ತು ಅತಿಸಣ್ಣ ರೈತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಹಲವು ಕುಟುಂಬಗಳು ತಲೆಮಾರುಗಳಿಂದ ಕೃಷಿಯನ್ನೇ ಜೀವನೋಪಾಯವನ್ನಾಗಿ ಮಾಡಿಕೊಂಡಿವೆ. ಇಂತಹ ಭೂಮಿಯನ್ನು ಟೌನ್ಶಿಪ್ ಯೋಜನೆಯ ಹೆಸರಿನಲ್ಲಿ ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮ ಖಂಡನೀಯ ಎಂದು ಆರೋಪಿಸಿದರು.
ಬಿಡದಿ ಟೌನ್ಶಿಪ್ ಯೋಜನೆ ಮತ್ತು ಭೂಸ್ವಾಧೀನ ಪ್ರಕ್ರಿಯೆಗೆ ಕಾನೂನು ಆಧಾರವಿಲ್ಲ ಎಂಬುದನ್ನು ಸಾರ್ವಜನಿಕ ವಿಚಾರಣೆಯಲ್ಲಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ವಿ. ಗೋಪಾಲಗೌಡ ನೇತೃತ್ವದ ವಿಚಾರಣಾ ಪ್ರಕ್ರಿಯೆಯಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ಸಂಘಟನೆ ಹೇಳಿದೆ. ರೈತರ ಅನುಮತಿ ಹಾಗೂ ಸಮಾಲೋಚನೆ ಇಲ್ಲದೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನ ಕಾನೂನುಬಾಹಿರವಾಗಿದೆ ಎಂದು ಆರೋಪಿಸಿದರು.
ರೈತರು ಕಳೆದ 560ಕ್ಕೂ ಹೆಚ್ಚು ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ದ್ವಿಮುಖ ಧೋರಣೆ ಅನುಸರಿಸುತ್ತಿದೆ ಎಂದು ಸಂಘಟನೆ ಟೀಕಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 14ರಂದು ಸಮಿತಿ ರಚಿಸುವುದಾಗಿ ಘೋಷಿಸಿದ್ದರು. ಆಗಸ್ಟ್ 9ರಂದು ನ್ಯಾಯಮೂರ್ತಿ ಗುರುನಾಥನ್ ನರೇಂದರ್ ನೇತೃತ್ವದ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸಿ 30 ದಿನಗಳೊಳಗೆ ವರದಿ ಪಡೆಯುವುದಾಗಿ ತಿಳಿಸಲಾಗಿತ್ತು. ಆದರೆ ಇದುವರೆಗೆ ಸಮಿತಿ ರಚನೆಗೆ ಸಂಬಂಧಿಸಿದ ಅಧಿಕೃತ ಆದೇಶ ಹೊರಬಿದ್ದಿಲ್ಲ ಎಂದು ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದರು.
ಸಮಿತಿ ರಚನೆಯಲ್ಲಿ ಆಗುತ್ತಿರುವ ವಿಳಂಬ ಅನಗತ್ಯ ಹಾಗೂ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿರುವ ಸಂಯುಕ್ತ ಹೋರಾಟ ಕರ್ನಾಟಕ, ಫಲವತ್ತಾದ ನೀರಾವರಿ ಕೃಷಿ ಭೂಮಿಯನ್ನು ರಿಯಲ್ ಎಸ್ಟೇಟ್ ಹಾಗೂ ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಒಪ್ಪಿಸುವ ಪ್ರಯತ್ನವನ್ನು ತಡೆಯಬೇಕು ಎಂದು ಎಂದರು.
“ಅನ್ನ ನೀಡುವ ಭೂಮಿಗೆ ಪರ್ಯಾಯವಿಲ್ಲ. ಅಭಿವೃದ್ಧಿಯ ಹೆಸರಿನಲ್ಲಿ ರೈತರನ್ನು ಭೂಮಿಯಿಂದ ಒಕ್ಕಲೆಬ್ಬಿಸುವ ಕ್ರಮದಿಂದ ಅಂತಿಮವಾಗಿ ನಷ್ಟ ಅನುಭವಿಸುವವರು ರೈತರೇ. ಆದ್ದರಿಂದ ಕೃಷಿ ಭೂಮಿ ರಕ್ಷಣೆಗೆ ಪಕ್ಷಾತೀತ ಜನಚಳವಳಿ ಅಗತ್ಯ. ಆ.25ರಂದು ನಡೆಯುವ ವಿಧಾನಸೌಧ ಚಲೋದಲ್ಲಿ ರಾಜ್ಯದ ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿ–ಯುವಜನರು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು,” ಎಂದು ಹೇಳಿದರು.
ನಿರಂಜನ ಮೂರ್ತಿ, ತುಳಸೇಗೌಡ, ಓಂಕಾರಪ್ಪ, ಎಚ್.ಆರ್. ಬಸವರಾಜಪ್ಪ ಹಾಗೂ ಆರ್.ಆರ್. ಮಂಜೇಗೌಡ ಉಪಸ್ಥಿತರಿದ್ದರು.
Support the struggle of Bidadi farmers at Vidhana Soudha on August 25th
Leave a comment