ಚಿಕ್ಕಮಗಳೂರು: ಶೋಷಿತ ವರ್ಗದವರು ಸೇರಿದಂತೆ ಎಲ್ಲಾ ಜಾತಿ, ಜನಾಂಗದ ಬಡವರು ಸಮಾಜದ ಮುನ್ನಲೆಗೆ ಬರಬೇಕೆಂಬ ಉದ್ದೇಶದಿಂದ ರಾಜ್ಯಸರ್ಕಾರ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸಿ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.
ಅವರು ಇಂದು ಕ್ಷೇತ್ರದ ಹಳೇ ಲಕ್ಯಾ ಗ್ರಾಮದಲ್ಲಿ ೨೦೨೩-೨೪ ಮತ್ತು ೨೦೨೪-೨೫ನೇ ಸಾಲಿನಲ್ಲಿ ೧.೭೫ ಕೋಟಿ ರೂ. ವೆಚ್ಚದಲ್ಲಿ ಪ್ರತಿ ಫಲಾನುಭವಿಗೆ ೩.೭೫ ಲಕ್ಷ ರೂಗಳಂತೆ ಒಟ್ಟು ೪೭ ಫಲಾನುಭವಿಗಳ ಭೂಮಿಯಲ್ಲಿ ಬೋರ್ವೆಲ್ ಕೊರೆಯಲು ಚಾಲನೆ ನೀಡಿ ಮಾತನಾಡಿದರು.
ರಾಜ್ಯಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆಮಾಡಿ ಬೋರ್ವೆಲ್ ಕೊರೆಸುವ ಯೋಜನೆಗೆ ಇಂದು ಪ್ರಾರಂಭೋತ್ಸವ ನಡೆಸಲಾಗಿದೆ ಎಂದು ಹೇಳಿದರು.
ಹಿಂದೆ ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಫಲಾನುಭವಿಗೆ ೨.೫೦ ಲಕ್ಷ ರೂ ನೀಡುತ್ತಿದ್ದು, ಕೊಳವೆ ಬಾವಿಗೆ ಸಂಬಂಧಿಸಿದ ಎಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗಿರುವುದರಿಂದ ರಾಜ್ಯಸರ್ಕಾರ ಇದನ್ನು ಮನಗಂಡು ೩.೭೫ ಲಕ್ಷ ರೂಗಳಿಗೆ ಹೆಚ್ಚಿಸಿದೆ ಎಂದು ಶ್ಲಾಘಿಸಿದರು.
ಫಲಾನುಭವಿಗಳು ಗಂಗಾ ಕಲ್ಯಾಣ ಯೋಜನೆಯ ಸದುಪಯೋಗ ಪಡೆದುಕೊಂಡು ಉತ್ತಮ ಬೆಳೆ ಬೆಳೆಯುವ ಮೂಲಕ ಆರ್ಥಿಕ ಸದೃಢರಾಗುವ ಜೊತೆಗೆ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕೆಂದು ಮನವಿ ಮಾಡಿದರು.
ರಾಜ್ಯಸರ್ಕಾರ ಶಿಕ್ಷಣ, ಆರೋಗ್ಯ, ಬಡವರಿಗೆ ಬದುಕು ಕಟ್ಟಿಕೊಡಲು ಬದ್ಧವಾಗಿದೆ. ಇದಕ್ಕೆ ವಿದ್ಯಾರ್ಥಿ ಪೋಷಕರು ಹೆಚ್ಚು ಒತ್ತುನೀಡಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದಾಗ ಸರ್ಕಾರದ ಯೋಜನೆ ಫಲಪ್ರದವಾಗುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕಿ ಹೆಚ್ಚು ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಕೇಶ್ ಮಾತನಾಡಿ, ೨೦೨೩-೨೪, ೨೦೨೪-೨೫ ನೇ ಸಾಲಿನಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಒಟ್ಟು ೪೭ ಫಲಾನುಭವಿಗಳನ್ನು ಆಯ್ಕೆಮಾಡಲಾಗಿದ್ದು, ಇಂದು ಶಾಸಕರ ನೇತೃತ್ವದಲ್ಲಿ ಬೋರ್ವೆಲ್ ಕೊರೆಸಲು ಚಾಲನೆ ನೀಡಲಾಗಿದೆ ಎಂದರು.
೨೦೨೫-೨೬ನೇ ಸಾಲಿಗೆ ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದ್ದು, ಜೂ.೩೦ ಅಂತಿಮ ದಿನವಾಗಿದ್ದು, ಅಗತ್ಯ ಇರುವ ರೈತರು ಕೂಡಲೇ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಲಕ್ಯಾ ಗ್ರಾ.ಪಂ ಅಧ್ಯಕ್ಷ ಹನೀಫ್, ಮಾಜಿ ಅಧ್ಯಕ್ಷ ನಾಗಣ್ಣ, ಸಿದ್ದೇಶ್, ಪುಟ್ಟೇಗೌಡ, ಸಂತೋಷ್, ಶಶಿ, ಕಾಂತರಾಜ್, ಕೆಂಗೇಗೌಡ, ಮಧು, ಸಿದ್ದೇಗೌಡ ಮತ್ತಿತರರು ಉಪಸ್ಥಿತರಿದ್ದರು.
The government is committed to bringing all sections of the poor to the forefront of society.
Leave a comment