ಚಿಕ್ಕಮಗಳೂರು: ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಪ್ರಾಥಮಿಕ ಉದ್ದೇಶದಿಂದ ರಚನೆಗೊಂಡಿರುವ ಅಕ್ಕಪಡೆ ಜಿಲ್ಲೆಯಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಮಂಗಳವಾರ ಅಧಿಕೃತವಾಗಿ ಕಾರ್ಯಾರಂಭ ಮಾಡಿದೆ.
ಜಿಲ್ಲಾ ಮಟ್ಟದಲ್ಲಿ ಮಹಿಳಾ ಗೃಹ ರಕ್ಷಕರನ್ನು ಒಳಗೊಂಡ ಈ ಪಡೆಯು ಸ್ಥಳೀಯ ಪೊಲೀಸರ ನಿಕಟ ಸಹಯೋಗದಲ್ಲಿ ಬೆಳಿಗ್ಗೆ ೭ ರಿಂದ ರಾತ್ರಿ ೮ ಗಂಟೆಯವರೆಗೆ ಎರಡು ಪಾಳಿಗಳಲ್ಲಿ ಅಂದರೆ, ಬೆಳಿಗ್ಗೆ ೭ ರಿಂದ ಮಧ್ಯಾಹ್ನ ೨ ಗಂಟೆ ಮತ್ತು ಮಧ್ಯಾಹ್ನ ೨ ರಿಂದ ರಾತ್ರಿ ೮ ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಿಸುವ ಗುರಿ ಹೊಂದಿದೆ.
ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕಪಡೆ ಸಮಾಜದಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯ ನಿರ್ವಹಿಸುವ ಉದ್ದೇಶದಿಂದ ಜಾರಿಗೆ ತರಲಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರತಿ ಜಿಲ್ಲೆಗೆ ಒಂದರಂತೆ ಗಸ್ತುವಾಹನವನ್ನು ನೀಡಲಾಗಿದೆ. ಅಕ್ಕಪಡೆಯು ಬಸ್ ನಿಲ್ದಾಣಗಳು, ಶಾಲಾ, ಕಾಲೇಜುಗಳು, ಮಾರುಕಟ್ಟೆಗಳು, ಉದ್ಯಾನವನಗಳು, ದೇವಾಲಯಗಳು, ಮಸೀದಿ, ಚರ್ಚ್, ಮಹಿಳಾ ಹಾಸ್ಟೆಲ್ಗಳು ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸಲಿದೆ.
ಸಸಸಸಸಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಘನತೆ ಮತ್ತು ಸಬಲೀಕರಣವನ್ನು ಉತ್ತೇಜಿಸುವುದಾಗಿದೆ. ಶಿಕ್ಷಣದ ಮೂಲಕ ಹಕ್ಕುಗಳು, ಕಾನೂನುಗಳು, ಸುರಕ್ಷತಾ ಕ್ರಮಗಳು ಮತ್ತು ಲಭ್ಯವಿರುವ ಬೆಂಬಲ ವ್ಯವಸ್ಥೆಗಳ ಬಗ್ಗೆ, ಜಾಗೃತಿ ಮೂಡಿಸುವುದು ಮತ್ತು ಸಮಾಜದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆದು, ಕಾನೂನಿನ ರಕ್ಷಣೆಯೊಂದಿಗೆ ಭಯಮುಕ್ತ ವಾತಾವರಣ ಸೃಷ್ಟಿಸುವುದು ಅಕ್ಕ ಪಡೆಯ ಗುರಿಯಾಗಿದೆ.
ಅಕ್ಕ ಪಡೆಯು ಮಕ್ಕಳ ಕಲ್ಯಾಣ ಸಮಿತಿಗಳು, ಮಹಿಳಾ ಸಹಾಯವಾಣಿಗಳು, ಸರ್ಕಾರೇತರ ಸಂಸ್ಥೆಗಳು, ಕಾನೂನು ನೆರವು ಮತ್ತು ಆಶ್ರಯ ತಾಣಗಳೊಂದಿಗೆ ಸುಗಮ ಸಂಪರ್ಕ ಕಲ್ಪಿಸಿ ಸಮಾಲೋಚನೆ ಬೆಂಬಲವನ್ನು ನೀಡುತ್ತದೆ. ವಿಶ್ವಾಸ ವರ್ಧನೆ, ಸಮುದಾಯದಲ್ಲಿ ಸ್ನೇಹಪರ ಮತ್ತು ವಿಶ್ವಾಸಾರ್ಹ ಸ್ಥಿತಿಯನ್ನು ಸ್ಥಾಪಿಸುವುದು, ಸಂತ್ರಸ್ತೆಯರು ಮತ್ತು ಕುಟುಂಬಗಳು ಭಯವಿಲ್ಲದೆ ಸಹಾಯ ಪಡೆಯಲು ಪ್ರೋತ್ಸಾಹಿಸುತ್ತದೆ. ಮಹಿಳೆ ಮತ್ತು ಮಕ್ಕಳಿಗೆ ಕಿರುಕುಳ, ಕೌಟುಂಬಿಕ ಹಿಂಸೆ, ಯಾವುದೇ ರೀತಿಯ ದೌರ್ಜನ್ಯವನ್ನು ಎದುರಿಸುತ್ತಿರುವ ಮಹಿಳೆಯರು ಮತ್ತು ಹದಿಹರೆಯದ ಹೆಣ್ಣು ಮಕ್ಕಳು. ನಿರ್ಲಕ್ಷ್ಯ, ಕಳ್ಳಸಾಗಣೆ, ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿ, ಬಾಲ ಭಿಕ್ಷಾಟನೆ, ಮಾದಕ ದ್ರವ್ಯ ವ್ಯಸಕ್ಕೆ ಒಳಗಾದವರು ಅಥವಾ ನಿಂದನೆಗೆ ಒಳಗಾದ ಮಕ್ಕಳು ಜಾಗೃತಿ ಮತ್ತು ಶಿಕ್ಷಣದ ಮೂಲಕ ಈ ಯೋಜನೆಯ ಫಲಾನುಭವಿಯಾಗಿದ್ದಾರೆ.
ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅಕ್ಕಪಡೆಯ ವಾಹನಕ್ಕೆ ಹಸಿರು ಬಾವುಟವನ್ನು ತೋರಿಸುವ ಮೂಲಕ ಚಾಲನೆ ನೀಡಿ, ಅಕ್ಕಪಡೆಯ ನಾಲ್ವರು ಮಹಿಳಾ ಗೃಹರಕ್ಷಕಿಯರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ವೈ.ಆಲದಾರ್ತಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿ.ಟಿ.ಜಯಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಾಲತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಡಿ.ಸಂತೋಷ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅಕ್ಕಪಡೆಯ ವಾಹನಕ್ಕೆ ಹಸಿರು ಬಾವುಟ ತೋರಿಸುವ ಮೂಲಕ ಮಂಗಳವಾರ ಚಾಲನೆ ನೀಡಿದರು.
The newly formed Akkapade (community support unit) in the district begins operations
Leave a comment