ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ ಅಧಿಕಾರವಧಿಯಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಅಭಿವೃದ್ಧಿಗೆ ಒತ್ತುನೀಡಬೇಕು ಎಂದು ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಆಗ್ರಹಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತೀವ್ರ ಹಾಳಾಗಿದ್ದ ಕ್ಷೇತ್ರದ ರಸ್ತೆಗಳನ್ನು ದುರಸ್ಥಿಪಡಿಸುವಂತೆ ಸಾರ್ವಜನಿಕರ ಒತ್ತಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಗುಂಡಿ ಮುಚ್ಚುವ ಕೆಲಸ ಆರಂಭವಾಗಿದ್ದರೂ ಗುಣಮಟ್ಟದ ಅವೈಜ್ಞಾನಿಕ ಕಳಪೆ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.
ಅಪಾರ ಪ್ರಮಾಣದ ಅಕ್ರಮಗಳು ನಡೆಯುತ್ತಿದ್ದರೂ ಶಾಸಕರು ಚಕಾರವೆತ್ತದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಕಳಸದ ಸಂಸೆ ಗ್ರಾಮದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಇದಕ್ಕೊಂದು ಉದಾಹರಣೆಯಾಗಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ತುಂಬುತ್ತಾ ಬಂದರೂ ಮೂಡಿಗೆರೆ ಕ್ಷೇತ್ರದ ಅಭಿವೃದ್ಧಿ ನಿಂತ ನೀರಾಗಿದೆ. ಸ್ಥಳೀಯ ಶಾಸಕರು ಕೇವಲ ಮಾತಿನಲ್ಲೇ ಕಾಲಹರಣ ಮಾಡುತ್ತ ಜನಸಾಮಾನ್ಯರ ಸಮಸ್ಯೆಗಳಿಗೆ ತಮ್ಮಗೂ ಸಂಬಂಧ ಇಲ್ಲದಂತೆ ವರ್ತಿಸುತ್ತಿದ್ದಾರೆಂದು ದೂರಿದರು.
ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ, ಹೊಸ ಯೋಜನೆಗಳಿಗೆ ಅಭಿವೃದ್ಧಿ ಕಾರ್ಯಗಳಿಗೆ ಪ್ರಸ್ತಾವನೆ ಇಲ್ಲದಂತಾಗಿದೆ. ನಾಮಕಾವಸ್ತೆಗೆ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಅವೈಜ್ಞಾನಿಕ ಮತ್ತು ಸಂಪೂರ್ಣ ಕಳಪೆಯಿಂದ ಕೂಡಿದೆ ಎಂದು ಟೀಕಿಸಿದರು.
ಈ ಬಾರಿಯ ಭೀಕರ ಅತೀವೃಷ್ಟಿಯಿಂದಾಗಿ ಸಂತ್ರಸ್ಥರಾಗಿರುವ ಮಲೆಮನೆ, ಮಧುಗುಂಡಿ ಇನ್ನಿತರ ಗ್ರಾಮಗಳ ಜನರಿಗೆ ಪರಿಹಾರ ಕೊಡಿಸುವಲ್ಲಿ ಶಾಸಕರು ವಿಫಲರಾಗಿದ್ದಾರೆ. ಇದೇ ವಿಚಾರವನ್ನು ಚುನಾವಣಾ ಪೂರ್ವದಲ್ಲಿ ಜನರಿಗೆ ಭರವಸೆ ಕೊಟ್ಟು ಈಗ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಂತ್ರಸ್ತರ ಬದಲಿ ಭೂಮಿ ಗುರ್ತಿಸುವ ಪ್ರಕ್ರಿಯೆ ನಡೆದಿದ್ದು, ಅದನ್ನು ಮುಂದುವರೆಸಿಲ್ಲ ಎಂದು ದೂರಿದರು.
ಆನೆ ದಾಳಿ ಸೇರಿದಂತೆ ಕಾಡುಪ್ರಾಣಿಗಳ ಹಾವಳಿಯಿಂದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಕ್ಷೇತ್ರದಲ್ಲಿದ್ದ ದಿನವೇ ಓರ್ವ ವ್ಯಕ್ತಿ ಆನೆ ದಾಳಿಯಿಂದ ಮೃತಪಟ್ಟ ಘಟನೆ ನಡೆದಿತ್ತು. ಆದರೂ ಸರ್ಕಾರ ಮಾನವ ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಶಾಸಕರೂ ಈ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡ ತಂದು ಪರಿಹಾರ ಕೊಡಿಸುವಲ್ಲಿ ವಿಫಲರಾಗಿದ್ದಾರೆಂದು ಲೇವಡಿ ಮಾಡಿದರು.
ಆನೆ ಹಾವಳಿ ತಡೆಗೆ ಬೇಲಿ ನಿರ್ಮಿಸುವುದು, ಆನೆ ಶಿಬಿರ ಸ್ಥಾಪಿಸುವುದು ಸೇರಿದಂತೆ ಅರಣ್ಯ ಸಚಿವರು ಹಲವಾರು ಆದೇಶಗಳನ್ನು ಮಾಡಿದ್ದರೂ ಇದಾವುರೂ ಕಾರ್ಯರೂಪಕ್ಕೆ ಬಾರದೆ ನೆನೆಗುದಿಗೆ ಬಿದ್ದಿವೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಕಳಸ ಪಟ್ಟಣವನ್ನು ತಾಲ್ಲೂಕು ಕೇಂದ್ರವಾಗಿ ಘೋಷಿಸಿದ್ದು, ಇದೂವರೆಗೆ ಕಾಂಗ್ರೆಸ್ ಸರ್ಕಾರ ಯಾವುದೇ ರೀತಿಯ ಮೂಲ ಸೌಕರ್ಯಗಳನ್ನು ಕಲ್ಪಿಸಿಲ್ಲ. ತಾಲ್ಲೂಕು ಕಚೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವುದಾಗಿ ಹೇಳುತ್ತಿದ್ದರೂ ಕಾಮಗಾರಿ ಪ್ರಾರಂಭಿಸಿಲ್ಲ, ಆ ಭಾಗದ ಜನರು ಮೂಡಿಗೆರೆಗೆ ಅಲೆಯುವುದು ತಪ್ಪಿಲ್ಲ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಮಂಜುನಾಥ್, ಲಿಖಿತ್, ದೀಕ್ಷಿತ್ ಉಪಸ್ಥಿತರಿದ್ದರು.
There is zero development in the Mudigere assembly constituency.
Leave a comment