Home ಜಿಲ್ಲೆಯಲ್ಲಿ ಸೆ.13ಕ್ಕೆ ಮೂರನೇ ರಾಷ್ಟ್ರೀಯ ಲೋಕ್ ಅದಾಲತ್
HomechikamagalurLatest Newsnamma chikmagalur

ಜಿಲ್ಲೆಯಲ್ಲಿ ಸೆ.13ಕ್ಕೆ ಮೂರನೇ ರಾಷ್ಟ್ರೀಯ ಲೋಕ್ ಅದಾಲತ್

Share
Share

ಚಿಕ್ಕಮಗಳೂರು: ಈ ವರ್ಷದ ಮೂರನೇ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಸೆಪ್ಟಂಬರ್ ೧೩ ರಂದು ಹಮ್ಮಿಕೊಂಡಿರುವುದಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ನ್ಯಾಯಾಂಗ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವರ್ಷದಲ್ಲಿ ನಾಲ್ಕು ರಾಷ್ಟ್ರೀಯ ಲೋಕ ಅದಾಲತ್‌ಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ ಮಾರ್ಚ್ ೮, ಜುಲೈ ೧೨ ರಂದು ಅದಾಲತ್‌ಗಳು ಯಶಸ್ವಿಯಾಗಿ ನಡೆದಿವೆ. ಇದೀಗ ಸೆಪ್ಟಂಬರ್ ೧೩ ರಂದು ಅದಾಲತ್ ಅನ್ನು ಆಯೋಜಿಸಲಾಗಿದೆ ಎಂದರು.

ಪ್ರತಿಯೊಬ್ಬ ನಾಗರಿಕ ಕೂಡ ಗೌರವದಿಂದ, ಘನತೆಯಿಂದ ಬದುಕಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಸಮಾಜದಲ್ಲಿರುವ ಎಷ್ಟೋ ಮಂದಿ ಬಡವರು, ಅನಕ್ಷರಸ್ಥರು, ಅಂಗವಿಕಲರು, ಮಹಿಳೆಯರು, ಮಕ್ಕಳು ಇವರಿಗೆಲ್ಲ ನ್ಯಾಯ ಸಿಗುವುದು ಕಠಿಣವಾಗಿದ್ದು, ಸುಲಭದಲ್ಲಿ ನ್ಯಾಯ ಒದಗಿಸುವ ಸಲುವಾಗಿ ಕಾನೂನು ಸೇವೆಗಳ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಅದರ ಕಾಯ್ದೆಯಡಿಯಲ್ಲಿ ಲೋಕ ಅದಾಲತ್ ಅನ್ನು ನಡೆಸಲಾಗುತ್ತಿದೆ. ಪ್ರತಿಯೊಬ್ಬರಿಗೂ ಅವರಿಗಿರುವ ಹಕ್ಕುಗಳ ಬಗ್ಗೆ ಅರಿವನ್ನು ಕೂಡ ಮೂಡಿಸಲಾಗುತ್ತಿದೆ. ಈಗಾಗಲೇ ಕಾನೂನು ಸೇವಾ ಪ್ರಾಧಿಕಾರದಿಂದ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ, ಮಕ್ಕಳು, ಮಹಿಳೆಯರು, ಅಂಗವಿಕಲರ ಹಕ್ಕುಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲಾಗಿದೆ ಎಂದು ಹೇಳಿದರು.

ಜುಲೈ ೧೨ ರಂದು ನಡೆದ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಒಟ್ಟು ೪,೪೯೮ ಪ್ರಕರಣಗಳನ್ನು ಮಾತ್ರವಲ್ಲದೆ, ಸುಮಾರು ೧,೬೨,೧೨೯ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಲೋಕ ಅದಾಲತ್‌ನಿಂದ ಖರ್ಚಿಲ್ಲದೆ ಶೀಘ್ರ ನ್ಯಾಯ ದೊರೆಯುತ್ತದೆ. ಜೊತೆಗೆ ಸಮಯ ಉಳಿತಾಯವಾಗಲಿದ್ದು, ಕಕ್ಷಿದಾರರಲ್ಲಿ ಪರಸ್ಪರ ಬಾಂಧವ್ಯ ಕೂಡ ಉಳಿಯಲಿದೆ ಎಂದು ತಿಳಿಸಿದರು.

ಖಾಯಂ ಜನತಾ ನ್ಯಾಯಾಲಯದ ವ್ಯಾಪ್ತಿಗೆ ಸರಕು ಸಾಗಣೆ, ಭೂ ಸಾರಿಗೆ, ಜಲಸಾರಿಗೆ, ಅಂಚೆ ಮತ್ತು ತಂತಿ ವ್ಯವಸ್ಥೆ, ದೂರವಾಣಿ ಸೌಲಭ್ಯ, ವಿದ್ಯುತ್ ಮತ್ತು ನೀರು ಸರಬರಾಜು, ಸಾರ್ವಜನಿಕ ನೈರ್ಮಲ್ಯ, ಆಸ್ಪತ್ರೆ, ವಿಮಾ ಸೇವೆ, ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆ, ಶಿಕ್ಷಣ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ ಸೇವೆ, ರಿಯಲ್ ಎಸ್ಟೇಟ್‌ಗಳಿಗೆ ಸಂಬಂಧಪಟ್ಟ ಸೇವೆಗಳು ಒಳಪಟ್ಟಿವೆ. ಸಂಬಂಧಿಸಿದ ವೆಬ್‌ಸೈಟ್ ಮೂಲಕ ಯಾವುದೇ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು. ಈ ಜಿಲ್ಲೆಗೆ ಸಂಬಂಧಪಟ್ಟಂತೆ ಖಾಯಂ ಜನತಾ ನ್ಯಾಯಾಲಯ ಮಂಗಳೂರಿನ ಕೊಡಿಯಾಲಬೈಲ್‌ನಲ್ಲಿದೆ ಎಂದು ಮಾಹಿತಿ ನೀಡಿದರು.

ಮಧ್ಯಸ್ಥಿಕೆಯಲ್ಲಿ ಕೂಡ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿದ್ದು, ೯೦ ದಿನಗಳ ಕಾಲ ಅಂದರೆ ಜುಲೈ ೧ ರಿಂದ ಅಕ್ಟೋಬರ್ ೬ ರವರೆಗೆ ಮಧ್ಯಸ್ಥಿಕೆ ಮೂಲಕ ಪ್ರಕರಣಗಳ ವಿಲೇವಾರಿ ಮಾಡಲು ಆಂದೋಲನ ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಮಧ್ಯಸ್ಥಿಕೆಯ ಮೂಲಕ ೩೧ ಪ್ರಕರಣಗಳಲ್ಲಿ ರಾಜಿ ಸಂಧಾನ ನಡೆಸಲಾಗಿದೆ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ಮಾತನಾಡಿ, ನ್ಯಾಯವನ್ನು ಅರಸಿ ಬರುವ ಕಕ್ಷಿದಾರರೇ ಆಸಕ್ತಿ ವಹಿಸಿದಲ್ಲಿ ಲೋಕ ಅದಾಲತ್‌ನಲ್ಲಿ ಪ್ರಕರಣಗಳು ಇತ್ಯರ್ಥಗೊಳ್ಳಲು ಸಾಧ್ಯವಾಗುತ್ತದೆ. ಮನುಷ್ಯ ಸ್ವತಃ ಸಂಘರ್ಷ ಜೀವಿಯಾಗಿದ್ದು, ನ್ಯಾಯಾಲಯದಲ್ಲಿ ನಡೆಯುವ ಪ್ರಕರಣಗಳಲ್ಲಿ ಒಬ್ಬರಿಗೆ ಸೋಲು, ಇನ್ನೊಬ್ಬರಿಗೆ ಗೆಲುವು ಸಹಜ. ಈ ಹಿನ್ನೆಲೆಯಲ್ಲಿ ಕಕ್ಷಿದಾರರು ಈ ನಿಟ್ಟಿನಲ್ಲಿ ಮಧ್ಯಸ್ಥಿಕೆಯಲ್ಲಿ ವಿವಾದಗಳನ್ನು ಬಗೆಹರಿಸಿಕೊಳ್ಳುವುದರಿಂದ ಸೋಲು-ಗೆಲುವಿನ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಕಿವಿಮಾತು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಆದ ವಿ.ಹನುಮಂತಪ್ಪ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಭಾನುಮತಿ, ನ್ಯಾಯಾಧೀಶರುಗಳಾದ ದ್ಯಾವಪ್ಪ, ವಿ.ಪ್ರಕಾಶ್, ರಾಘವೇಂದ್ರ ಕುಲಕರ್ಣಿ, ಅನುರಾಧ, ಶರತ್ ಕುಮಾರ್, ನಂದಿನಿ, ವಕೀಲರು ಹಾಗೂ ಕಕ್ಷಿದಾರರು ಭಾಗವಹಿಸಿದ್ದರು,

Third National Lok Adalat to be held in the district on September 13

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...