ಚಿಕ್ಕಮಗಳೂರು : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್ ಅವರ ಅಧಿಕಾರ ಸ್ವೀಕಾರ ಸಮಾರಂಭ ಜೂ.೨೧ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು ಆ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸಹಸ್ರಾರು ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.
ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬೃಹತ್ ಸಮಾರಂಭಕ್ಕೆ ಜಿಲ್ಲೆಯಿಂದ ಸಾವಿರಾರು ಕಾಂಗ್ರೆಸ್ಸಿಗರು, ಭಾಗವಹಿಸಲಿದ್ದಾರೆ. ಜಿಲ್ಲೆಯ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಆಯಾ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರು , ಕಾರ್ಯಕರ್ತರು ಹಾಗೂ ನಾಮ ನಿರ್ದೇಶಿತ ಸದಸ್ಯರು ಭಾಗವಹಿಸುವ ಬಗ್ಗೆ ತಯಾರಿ ಸಭೆಗಳನ್ನು ಇಂದಿನಿಂದ ನಡೆಸಲಾಗುವುದು ಎಂದರು.
ಬಿ.ಕೆ.ಹರಿಪ್ರಸಾದ್ ಅವರು ವಿದ್ಯಾರ್ಥಿ ಜೀವನದಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡವರಾಗಿದ್ದಾರೆ. ಕಳೆದ ೫ ದಶಕದಿಂದ ಪಕ್ಷದ ಕೆಳಹಂತದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿವರೆಗೆ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ರಾಜ್ಯಸಭೆ, ವಿಧಾನ ಪರಿಷತ್ ಸದಸ್ಯರಾಗಿ ಹೆಚ್ಚಿನ ರಾಜಕೀಯ ಅನುಭವ ಹೊಂದಿದವರಾಗಿದ್ದಾರೆ ಎಂದರು.
ಡಿ.ಕೆ.ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಪಡೆದ ಮೊದಲ ಸಂಪುಟ ಸಭೆಯಲ್ಲಿ ಮಹತ್ತರವಾದ ಘೋಷಣೆಗಳನ್ನು ಮಾಡುವ ಮೂಲಕ ವಿದ್ಯಾರ್ಥಿ, ಯುವಜನರ ಪರ ಆಡಳಿತ ನಡೆಸುವ ಮುನ್ಸೂಚನೆ ನೀಡಿದ್ದಾರೆ ಎಂದ ಹೇಳಿದರು.
ಜಿಲ್ಲೆಯಲ್ಲಿ ಎಸ್ಐಆರ್ ಪ್ರಗತಿದಾಯಕವಾಗಿ ಜರುಗಿದ್ದು ಶೇ.೯೩ ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ. ಅಧಿಕಾರಿಗಳು ಮತ್ತು ಬಿಎಲ್ಎ-೨ ಗಳ ಪ್ರಯತ್ನ ಸ್ವಾಗತಾರ್ಹ. ಪಟ್ಟಿಯಿಂದ ಹೊರಗುಳಿದವರನ್ನು ಮ್ಯಾಪಿಂಗ್ ಕಾರ್ಯ ಪೂರ್ಣಗೊಳಿಸಬೇಕು. ಮತದಾರರು ಕೂಡ ವೈಯಕ್ತಿಕ ಆಸಕ್ತಿಯಿಂದ ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ಪ್ರಯತ್ನಿಸಬೇಕು ಎಂದು ವಿನಂತಿಸಿದರು.
ಪತ್ರಿಕಾ ಗೋಷ್ಟಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ, ತಾಲೂಕು ಅಧ್ಯಕ್ಷ ಮಲ್ಲೇಶಸ್ವಾಮಿ,, ಮುಖಂಡರಾದ ನಯಾಜ್ಅಹಮದ್, ನಾಗಮ್ಮ, ಸುರೇಶ್, ತನೋಜ್ಕುಮಾರ್ನಾಯ್ಡು ಮತ್ತಿತರರಿದ್ದರು.
Thousands of Congress workers attend the swearing-in ceremony
Leave a comment