ಚಿಕ್ಕಮಗಳೂರು: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ಸಾಲು ರಜೆ ನಡುವೆ ಪ್ರವಾಸಿಗರು ಜಿಲ್ಲೆಗೆ ಲಗ್ಗೆ ಇಟ್ಟಿದ್ದು, ಎಲ್ಲಾ ಹೋಂಸ್ಥೆ ಮತ್ತು ರೆಸಾರ್ಟ್ಗಳು ಭರ್ತಿಯಾಗಿವೆ.
ಮುಳ್ಳಯ್ಯನಗಿರಿ, ಬಾಬಾಬುಡನ್ ಗಿರಿ, ಗಾಳಿಕೆರೆ, ಕೆಮ್ಮಣ್ಣುಗುಂಡಿ, ಕುದುರೆ ಮುಖ, ದೇವರಮನೆ, ರಾಣಿಝರಿ, ಶೃಂಗೇರಿ, ಹೊರನಾಡು ಸೇರಿ ಎಲ್ಲೆಡೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಶುಕ್ರವಾರ ಜಮಾಯಿಸಿದ್ದರು. ಹೊರ ರಾಜ್ಯಗಳು ಮತ್ತು ನಾಡಿನ ವಿವಿಧೆಡೆಗಳಿಂದ ಜನ ದಾಂಗುಡಿ ಇಟ್ಟಿದ್ದರು. ಗಿರಿ ಶ್ರೇಣಿ ತಾಣಗಳು, ಧಾರ್ಮಿಕ ಕ್ಷೇತ್ರಗಳು, ಜಲಪಾತಗಳು, ಇತರ ಪ್ರೇಕ್ಷಣೀಯ ಸ್ಥಳಗಳಲ್ಲಿ ಪ್ರವಾಸಿಗರ ಕಲರವ ಮೇಲೈಸಿತ್ತು. ಅಲ್ಲಲ್ಲಿ ಕಾರುಗಳನ್ನು ನಿಲ್ಲಿಸಿ ಕಾಫಿ ಮತ್ತು ಟೀ ತೋಟಗಳಲ್ಲಿ ಫೋಟೊ ಕ್ಲಿಕ್ಕಿಸಿಕೊಂಡರು.
ತಂಡೋಪ ತಂಡವಾಗಿ ಸುತ್ತಾಡಿದರು. ಬಹುತೇಕರು ಕಾರುಗಳಲ್ಲಿ ಬಂದಿದ್ದರಿಂದ ಚಿಕ್ಕಮಗಳೂರು ನಗರ ಸೇರಿ ಎಲ್ಲೆಡೆ ವಾಹನ ದಟ್ಟಣೆ ಉಂಟಾಗಿತ್ತು. ಹೆದ್ದಾರಿಗಳಲ್ಲೂ ಕಾರುಗಳ ಸಾಲು ದೊಡ್ಡದಾಗಿತ್ತು. ಅದರಲ್ಲೂ ರಾಜ್ಯದ ಅತೀ ಎತ್ತರದ ಶಿಖರವಾಗಿರುವ ಮುಳ್ಳಯ್ಯನಗಿರಿಯಲ್ಲಿ ಆಹ್ಲಾದಕರ ಅನುಭವ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು.
ಮುಳ್ಳಯ್ಯನಗಿರಿ ರಸ್ತೆಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಪ್ರವಾಸೋದ್ಯಮ ಇಲಾಖೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ಮಿತ್ರರನ್ನು ನೇಮಿಸಿದ್ದು, ಅವರು ಕೂಡ ಪ್ರವಾಸಿಗರಿಗೆ ಮಾರ್ಗದರ್ಶನ ನೀಡಿದರು. ಶೃಂಗೇರಿ, ಕಳಸ, ಹೊರನಾಡು, ಅಮೃತಾಪುರ ದೇಗುಲಗಳಿಗೂ ಜನ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದರು. ಪ್ರವಾಸಿಗರು ಹೆಚ್ಚಾಗಿದ್ದರಿಂದ ಕೆಎಸ್ಆರ್ಟಿಸಿ ಬಸ್ಗಳು ಕೂಡ ಭರ್ತಿಯಾಗಿ ಕಾರ್ಯಾಚರಣೆ ಮಾಡಿದವು.
ಶನಿವಾರ ಮತ್ತು ಭಾನುವಾರ ಮುಳ್ಳಯ್ಯನಗಿರಿ ಮತ್ತು ಬಾಬಾಬುಡನ್ಗಿರಿಗೆ ತೆರಳಲು ಈಗಾಗಲೇ ಅನ್ಲೈನ್ ಬುಕ್ಕಿಂಗ್ ಪೂರ್ಣಗೊಂಡಿದೆ. ದಿನಕ್ಕೆ 1200 ವಾಹನಗಳಿಗೆ ಮಾತ್ರ ಅವಕಾಶ ಇದ್ದು, ಅಷ್ಟೂ ಬುಕ್ಕಿಂಗ್ ಆಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಇನ್ನೊಂದೆಡೆ ಮೂಡಿಗೆರೆ ಭಾಗದಲ್ಲಿ ಪ್ರವಾಸಿಗರ ಸಂಖ್ಯೆ ನಿರೀಕ್ಷೆಗಿಂತ ಕಡಿಮೆಯಾಗಿದೆ. ಅಲ್ಲಿನ ಹೋಂಸ್ಟೆ ಮತ್ತು ರೆಸಾರ್ಟ್ಗಳಿಗೆ ಅಷ್ಟೇನು ಬೇಡಿಕೆ ಇರಲಿಲ್ಲ. ಬಹುತೇಕ ಹೋಂಕ್ಷೆಗಳು ಖಾಲಿ ಇವೆ. ಚಿಕ್ಕಮಗಳೂರಿಗೆ ಬರುವ ಪ್ರವಾಸಿಗರು ದೇವರಮನೆ, ರಾಣಿಝರಿ ಕಡೆಗೆ ಬರುತ್ತಿಲ್ಲ ಎಂದು ಕೊಟ್ಟಿಗೆಹಾರದ ಹೋಂಸ್ಥೆ ಮಾಲೀಕ ಸಂಜಯ್ಗೌಡ ಹೇಳಿದರು.
Tourists flock to the land of coffee for a vacation
Leave a comment