ಚಿಕ್ಕಮಗಳೂರು: ದೀಪಾವಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಪಟಾಕಿಗಳನ್ನು ಬಳಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ನಿರ್ದೇಶಿಸಿರುವ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಎಲ್ಲ್ಲ ಪಟಾಕಿ ಮಾರಾಟಗಾರರ ಗೋದಾಮುಗಳಲ್ಲಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ಮಾಡುತ್ತಿದ್ದಲ್ಲಿ, ಈ ಕೂಡಲೇ ಅದನ್ನು ಪರಿಶೀಲಿಸಿ, ಅಲ್ಲಿ ಹಸಿರು ಪಟಾಕಿಯಲ್ಲದೇ ಇನ್ನಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಹಾಗೂ ಉಲ್ಲಂಘಿಸಿದವರ ವಿರುದ್ಧ ಕಾನೂನು ಪ್ರಕಾರ ತೀವ್ರವಾದ ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ. ಈ ಬಾರಿಯ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಾಗೂ ಇನ್ನಾವುದೇ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿ ಹೊರತುಪಡಿಸಿ, ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟ ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಪಟಾಕಿ ಸಿಡಿಸುವುದು ವಾಡಿಕೆಯಾಗಿದ್ದರೂ ಪಟಾಕಿ ತಯಾರಿಕೆಯಲ್ಲಿ ಅನೇಕ ರಾಸಾಯನಿಕಗಳನ್ನು ಬಳಕೆ ಮಾಡಲಾಗುತ್ತಿದೆ. ಪಟಾಕಿ ಸಿಡಿಸಿದ ಮೇಲೆ ಅದರಿಂದ ಬಿಡುಗಡೆಯಾಗುವ ರಾಸಾಯನಿಕ ವಸ್ತುಗಳು ವಾತಾವರಣದಲ್ಲಿ ಬಿಡುಗಡೆಗೊಂಡು ವಾಯುಮಾಲಿನ್ಯಕ್ಕೆ ಕಾರಣವಾಗುತ್ತಿದೆ.
ಈ ನಿಟ್ಟಿನಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪಟಾಕಿಗಳಿಗೆ ಸಂಬಂಧಿಸಿದಂತೆ, ರಿಟ್ ಪಿಟಿಷನ್(ಸಿ) ನಂ.೭೨೮/೨೦೧೫ ರಲ್ಲಿ ದಿನಾಂಕ:೨೩/೧೦/೨೦೧೮ ಮತ್ತು ದಿನಾಂಕ:೩೧/೧೦/೨೦೧೮ ಹಾಗೂ ತದನಂತರ ಹಲವಾರು ನಿರ್ದೇಶನಗಳನ್ನು ನೀಡಿದ್ದು, ಈ ಆದೇಶದಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸಮಯ ರಾತ್ರಿ ೮ ಗಂಟೆಯಿಂದ ರಾತ್ರಿ ೧೦ ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ. ಇದಲ್ಲದೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ತನ್ನ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿದೆ.
ಹಸಿರು ಪಟಾಕಿ ಕುರಿತು ಸರ್ಕಾರದ ಆದೇಶ ಸಂಖ್ಯೆ: ಆರ್ಡಿ ೪೬೫ ಟಿಎನ್ಆರ್ ೨೦೨೦ ದಿನಾಂಕ:೧೨/೧೧/೨೦೨೦ರಲ್ಲಿ ವಿವರಣೆಯನ್ನು ನೀಡಲಾಗಿದ್ದು, ರಾಜ್ಯ ಪರಿಸರ ಮತ್ತು ಜೀವಿ ಪರಿಸ್ಥಿತಿ ಇಲಾಖೆಯು ತನ್ನ ಆದೇಶ ಸಂಖ್ಯೆ ಎಫ್ಇಇ:೪೬ ಇಎನ್ವಿ:೨೦೦೦, ಬೆಂಗಳೂರು ದಿನಾಂಕ :೨೯.೦೧.೨೦೦೪ ರಂತೆ ಪ್ರತಿ ಜಿಲ್ಲೆಯಲ್ಲಿ ಈಗಾಗಲೇ ಸ್ಥಾಪಿತಗೊಂಡಿರುವ ಜಿಲ್ಲಾ ಪರಿಸರ ಸಂರಕ್ಷಣಾ ಪ್ರಾಧಿಕಾರಕ್ಕೆ ಶಬ್ದ ಮಾಲಿನ್ಯ ನಿಯಂತ್ರಣ ಕಾರ್ಯವನ್ನು ವಹಿಸಲಾಗಿದೆ ಎಂದು ಈ ಸಂಬಂಧದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Warehouses may be seized if there is a stockpile of banned fireworks.
Leave a comment