ತರೀಕೆರೆ: ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಹಾಗೂ ಸೂಕ್ತ ಚಿಕಿತ್ಸೆ ಸಿಗದೆ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಳೇ ಲಕ್ಕವಳ್ಳಿಯಲ್ಲಿ ನಡೆದಿದೆ.
ಸುಶೀಲಾ (41) ಮೃತ ದುರ್ದೈವಿ. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಸಾವಿಗೆ ನೇರ ಕಾರಣವೆಂದು ಆರೋಪಿಸಿ ಮೃತ ಮಹಿಳೆಯ ಕುಟುಂಬಸ್ಥರು ಹಾಗೂ ಸ್ಥಳೀಯ ನಿವಾಸಿಗಳು ಲಕ್ಕವಳ್ಳಿ ಸರ್ಕಾರಿ ಆಸ್ಪತ್ರೆಯ ಮುಂದೆ ಜಮಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ.
ಸುಶೀಲಾ ಅವರಿಗೆ ನಿನ್ನೆ ಮಧ್ಯಾಹ್ನವೇ ತೀವ್ರ ಹೃದಯಾಘಾತ ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲು ಕುಟುಂಬಸ್ಥರು ಆಂಬುಲೆನ್ಸ್ಗಾಗಿ ಹರಸಾಹಸ ಪಟ್ಟರೂ, ಸಂಜೆಯವರೆಗೂ ವಾಹನ ಸಿಗದೆ ತೀವ್ರ ಪರದಾಟ ನಡೆಸಬೇಕಾಯಿತು.
ಆಸ್ಪತ್ರೆಯ ಆವರಣದಲ್ಲೇ ಆಂಬುಲೆನ್ಸ್ ಇದ್ದರೂ ಅದನ್ನು ಸಕಾಲಕ್ಕೆ ಕಳುಹಿಸದೆ ಅಧಿಕಾರಿಗಳು ಮತ್ತು ಸಿಬ್ಬಂದಿ ತೋರಿದ ಬೇಜವಾಬ್ದಾರಿತನವೇ ಪ್ರಾಣಹಾನಿಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಗಂಭೀರ ಆರೋಪ ಮಾಡಿದ್ದಾರೆ.
ಬಳಿಕ ತಡವಾಗಿ ಬಂದ 108 ಆಂಬುಲೆನ್ಸ್ ಮೂಲಕ ಸುಶೀಲಾ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದು, ಪರಿಶೀಲಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಜೀವ ರಕ್ಷಿಸಬೇಕಾದ ಸರ್ಕಾರಿ ಆಸ್ಪತ್ರೆಯ ಈ ಘೋರ ಅವ್ಯವಸ್ಥೆಯ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Woman dies after ambulance not arriving on time
Leave a comment