ಚಿಕ್ಕಮಗಳೂರು: ಕಿವಿಯ ಶಸ್ತ್ರ ಚಿಕಿತ್ಸೆಗೆ ಬಂದಿದ್ದ ಮಹಿಳೆಗೆ ವೈದ್ಯರು ಅನಸ್ತೇಷಿಯಾ ಕೊಡುತ್ತಿದ್ದಂತೆ ಹೃದಯಾ ಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು 33 ವರ್ಷದ ಭಾಗ್ಯ ಎಂದು ಗುರುತಿಸಲಾಗಿದೆ.
ಈ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ಮೂಡಿಗೆರೆ ಮಾರ್ಗದ ಅನ್ನಪೂರ್ಣ ಖಾಸಗಿ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದೆ.
ಮಂತ್ರಾಲಯದಿಂದ ಬಂದು ಕಳೆದ ಹತ್ತು ವರ್ಷಗಳಿಂದ ಚಿಕ್ಕಮಗಳೂರು ನಗರದ ಹಿರೇಮಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಭಾಗ್ಯ ಕಿವಿ ಸಂಬಂಧಿತ ಸಮಸ್ಯೆಗೆ ಶಸ್ತ್ರ ಚಿಕಿತ್ಸೆ ಪಡೆಯಲು ನಿನ್ನೆ ಸಂಜೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಕಿವಿ ಶಸ್ತ್ರ ಚಿಕಿತ್ಸೆಗೂ ಮುನ್ನ ವೈದ್ಯರು ಭಾಗ್ಯ ಅವರಿಗೆ ಅನಸ್ತೇಷಿಯಾ ನೀಡಿದ್ದಾರೆ. ಈ ವೇಳೆ ಹೃದಯಾಘಾತದಿಂದ ಭಾಗ್ಯ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಆದರೆ, ವೈದ್ಯರ ನಿರ್ಲಕ್ಷ್ಯದಿಂದಲೇ ಭಾಗ್ಯ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ಎದುರು ಗೋಳಾಟ ನಡೆಸಿದ್ದಾರೆ. ಮೃತ ಭಾಗ್ಯ ಅವರಿಗೆ ಎರಡು ಹೆಣ್ಣು ಮತ್ತು ಒಂದು ಗಂಡು ಮಗು ಇದ್ದು ಒಂದು ಮಗು ವಿಕಲ ಚೇತನವಾಗಿದೆ. ಗಂಡ-ಹೆಂಡತಿ ಇಬ್ಬರೂ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಇದೀಗ, ಭಾಗ್ಯ ಅವರ ಅಕಾಲಿಕ ಸಾವಿನಿಂದಾಗಿ ಕುಟುಂಬ ತಬ್ಬಲಿಯಾಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಘಟನೆಯ ನಿಖರ ಕಾರಣ ತಿಳಿದುಬರಲಿದೆ. ಈ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಮತ್ತು ಸಂಬಂಧಿಕರು ಆಗ್ರಹಿಸಿದ್ದಾರೆ.
Woman dies due to doctor’s negligence at private hospital
Leave a comment